ಚಾಮರಾಜನಗರ

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಡಾ.ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು, ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.

ರಥೋತ್ಸವಕ್ಕೂ ಮುನ್ನ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಆರ್ಚಕ ವೃಂದದವರು ದೇಗುಲದ ಗರ್ಭಗುಡಿಯಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಆನೆ ಉತ್ಸವ ನೆರವೇರಿಸಲಾಯಿತು. ನಂತರ ಮಲೆ ಮಹದೇಶ್ವರ ಬೆಟ್ಟದ ಸಾಕಾನೆ ಉಮಾ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ತೇರಿನ ಬಳಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯ ನೆರವೇರಿಸಿ, ನಂತರ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಪಾನಿ, ಛತ್ರಿ, ಚಾಮರ, ನಂದಿಧ್ವಜ ಹಾಗೂ ಮಂಗಳ ವಾದ್ಯದೊಂದಿಗೆ ತೇರನ್ನು ಎಳೆಯಲಾಯಿತು. ಹುಲಿ ವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು ಜವನ ಎಸೆದು, ದವಸ ಧಾನ್ಯಗಳನ್ನು ಎರಚಿ ಪ್ರಾರ್ಥಿಸಿದರು.

ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನೆರೆದಿದ್ದ ಭಕ್ತರು ಉಘೇ ಮಾದಪ್ಪ ಉಘೇ ಮಾಯ್ಕಾರ ಎಂದು ತೇರನ್ನು ನಾ ಮುಂದು ತಾ ಮುಂದು ಎಂದು ಎಳೆಯಲು ಮುಂದಾದಾಗ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಐದು ದಿನಗಳಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದ್ದ ಭಕ್ತಾದಿಗಳು ಬುಧವಾರ ರಥೋತ್ಸವ ಮುಗಿದ ಬಳಿಕ ತಮ್ಮ ತಮ್ಮ ಊರುಗಳಿಗೆ ಹಿಂದಿರುಗಿದರು. ಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಾರದ ಹಿಂದೆ 2 ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸಿ ಬೆಟ್ಟದಲ್ಲೇ ಬೀಡು ಬಿಟ್ಟಿದ್ದರು. ಅಲ್ಲದೆ ಎರಡು ದಿನಗಳಿಂದ ವಾಹನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಸ್ಥಾನದ ರಂಗಮಂದಿರ ಹಾಗೂ ಇನ್ನಿತರ ವಸತಿಗೃಹಗಳಲ್ಲಿ ವಾಸ್ತವ್ಯ ಹೂಡಿದ್ದರು.

ಮ.ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ 8 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

ಗಮನ ಸೆಳೆದ ಬೇಡಗಂಪಣ ಹೆಣ್ಣು ಮಕ್ಕಳು ಮಹಾರಥೋತ್ಸವದಲ್ಲಿ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳು ಕೇಸರಿ ಬಣ್ಣದ ಸೀರೆ ಉಟ್ಟು, ಬೆಲ್ಲದಾರತಿ ಹಿಡಿದುಕೊಂಡಿದ್ದು ಭಕ್ತಾದಿಗಳ ಕಣ್ಮನ ಸೆಳೆದರು. ಕೆಲವು ಭಕ್ತಾದಿಗಳು ಅವರೊಡನೆ ಸೆಲ್ಫಿ ತೆಗೆದುಕೊಂಡರು.

ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಅರ್ಚಕ ವೃಂದದವರು, ತಾಲೂಕು ಕಾರ್ಯ ನಿರ್ವಹಿತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಮಹಾದೇಶ್ ಎಂ ಗೌಡ, ಉಪಾಧ್ಯಕ್ಷ ಗೋವಿಂದ್ ಕೆ ಸೋಮಶೇಖರ್ ಸದಸ್ಯರಾದ ಲಿಂಗರಾಜು, ಮಹದೇವಸ್ವಾಮಿ , ಅಭಿಲಾಶ್, ಪ್ರಭು ಕುಮಾರ್ ಭರತ್ ಪ್ರೀತಮ್ ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago