ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡಿನಿಂದ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಡೆದುಕೊಂಡು ಬರುತ್ತಿದ್ದ ವೇಳೆ ಕುರಟ್ಟಿ ಹೊಸೂರು ಗ್ರಾಮದ ಸಮೀಪ ಅರಣ್ಯ ಪ್ರದೇಶದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಭಕ್ತಾದಿಗಳು ಆತಂಕದಲ್ಲಿಯೇ ಪಾದಯಾತ್ರೆ ಮುಂದುವರಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ಡೆಂಕಣಿಕೋಟೆ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾವೇರಿ ನದಿ ಹೊಳೆ ದಾಟಿ ದಬ್ಬಗುಳಿ ಬಸವೇಶ್ವರ ದೇವಸ್ಥಾನದಿಂದ ತೆಪ್ಪದಲ್ಲಿ ಆಗಮಿಸಿ ಪಾದಯಾತ್ರೆ ಮುಂದುವರಿಸಿದ್ದಾರೆ.
ಕಾವೇರಿ ಹೊಳೆ ದಾಟಿದ ನಂತರ ದಂಟಳ್ಳಿ ಮಾರ್ಗವಾಗಿ ಕುರಟ್ಟಿ ಹೊಸೂರು, ವಡಕೆ ಹಳ್ಳ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಅರಣ್ಯ ಪ್ರದೇಶದ ಮಾರ್ಗ ಮಧ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳೆಂದು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ತೆರಳಿದೆ. ಈ ವೇಳೆ ವಾಹನ ಸವಾರರು ಹಾಗೂ ಪಾದಯಾತ್ರಿಕರು ಆನೆಗಳ ಹಿಂಡನ್ನು ನೋಡಿ ಬೆಚ್ಚಿಬಿದ್ದಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಆನೆಗಳು ಆನೆ ದಾಟುವಾಗ ಕಾಡು ಪ್ರಾಣಿಗಳಿಗೂ , ಪಾದಯಾತ್ರಿಕರಿಗೂ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ ಪರಿಣಾಮ ಯಾವುದೇ ಅಪಾಯ ಸಂಭವಿಸಿಲ್ಲ,
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮೇವು ನೀರು ಅರಸಿ ವನ್ಯಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಕಡೆ ತೆರಳುತ್ತದೆ. ಈ ಸಂಬಂಧ ಪಾದಯಾತ್ರಿಕರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಪ್ರಾಣಿ ಪ್ರಿಯರು ಮನವಿ ಮಾಡಿದ್ದಾರೆ.





