Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಆ.18ರಂದು ಮ.ಬೆಟ್ಟದಲ್ಲಿ ಸಾಮೂಹಿಕ ವಿವಾಹ : ಹಸೆಮಣೆ ಏರಲಿರುವ 95 ನವಜೋಡಿ

mahdeshwar betta marrage

ಹನೂರು : ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಆ.18 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಹದೇಶ್ವರ ಬೆಟ್ಟದಲ್ಲಿ ಆ.18ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ 95 ಜೋಡಿಗಳು ಹಸೆಮಣೆ ಏರಲು ಸಿದ್ಧವಾಗಿದ್ದು ಎಲ್ಲರೂ ನೋಂದಣಿ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮ ಸಂಬಂಧ ತಮಗೆ ನೀಡಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದಾದರೂ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಉಚಿತ ಸಾಮೂಹಿಕ ವಿವಾಹಕ್ಕೆ ಬರಲಿರುವ ವಧು-ವರರಿಗೆ ಪ್ರತ್ಯೇಕ ಕೊಠಡಿ, ಸಂಬಂಧಿಕರಿಗೆ ಡಾರ್ಮೆಟ್ರಿ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಸತಿಗೃಹಗಳ ಸ್ವಾಗತಕಾರರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಶಿಷ್ಟಾಚಾರ ಪಾಲನೆ ಮಾಡಿ
ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು. ಈ ನಿಟ್ಟಿನಲ್ಲಿ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಗತ್ಯ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಶಿಷ್ಟಾಚಾರ ಪಾಲನೆ ಮಾಡಬೇಕು ಎಂದರು.

ವಿವಾಹ ಕಾರ್ಯಕ್ರಮಕ್ಕೆ ಸಿಹಿ ಊಟ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.18 ರಂದು ಉಚಿತ ಸಾಮೂಹಿಕ ವಿವಾಹ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಬರುವಂತಹ ಪ್ರತಿಯೊಬ್ಬರಿಗೂ ಸಿಹಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಶುಕ್ರವಾರ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಉಪ ಕಾರ್ಯದರ್ಶಿ ಚಂದ್ರಶೇಖರ್, ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹದೇವಸ್ವಾಮಿ, ಮಹೇಶ್, ಜನಾರ್ಧನ್, ನಾಗರಾಜು, ಕೃಷ್ಣಮೂರ್ತಿ, ಶಾಸ್ತ್ರಿ, ರಮೇಶ್, ಕಿರಿಯ ಅಭಿಯಂತರ ಸೆಲ್ವ ಗಣಪತಿ, ಕಾರ್ಯದರ್ಶಿಗಳ ಆಪ್ತ ಸಹಾಯಕ ರವೀಂದ್ರ, ಸಂಪತ್ ಇನ್ನಿತರರು ಹಾಜರಿದ್ದರು.

Tags:
error: Content is protected !!