Mysore
19
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.

ಬಂಡೀಪುರ ಬಿಳಿಗಿರಂಗನ ಬೆಟ್ಟ, ಕಬಿನಿ, ನಾಗರಹೊಳೆ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ ಮಾಡಲಾಗಿದೆ ಎಂಬ ದೂರಿನ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು.

ಪರಿಸರ ಸೂಕ್ಷ್ಮ ವಲಯ ಘೋಷಣೆಯಾದ ಬಳಿಕ ರೆಸಾರ್ಟ್ ಹೋಂಸ್ಟೇಗಳ ನಿರ್ಮಾಣಕ್ಕೆ ಅವಕಾಶ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಯಮ ಉಲ್ಲಂಘಿಸಿ ರೆಸಾರ್ಟ್ ನಿರ್ಮಾಣ ಮಾಡಿರುವ ದೂರಿನ ಸಂಬಂಧ ತಾಲ್ಲೂಕು, ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿ, ಕಂದಾಯ, ಪರಿಸರ, ಪ್ರವಾಸೋದ್ಯಮ, ಅಬಕಾರಿ ಇಲಾಖೆಗಳು ಪರಿಶೀಲನೆ ನಡೆಸಬೇಕು. ಅಕ್ರಮ ಎಸಗಿರುವುದು ಕಂಡುಬಂದಲ್ಲಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ, ಅಕ್ರಮ ಕುರಿತು ದಾಖಲೆ ಸಂಗ್ರಹಿಸುವಲ್ಲಿ ಅರಣ್ಯ ಇಲಾಖೆ ಅಽಕಾರಿಗಳು ವಿಫಲವಾಗಿದ್ದು , ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವುಗೊಳಿಸದಿದ್ದರೆ ಫೆ.25ರ ಬಳಿಕ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಬೇಡಗುಳಿ, ಅತ್ತೀಖಾನೆ, ಹೊನ್ನಮೇಟಿಯಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿ ಗುತ್ತಿಗೆ ಅವಧಿ ಮುಗಿದರೂ ಸರ್ಕಾರಕ್ಕೆ ಬಿಟ್ಟುಕೊಟ್ಟಿಲ್ಲ. ಕಾಫಿ ತೋಟಗಳಲ್ಲಿನ ಕಳೆನಾಶಕದಿಂದ ವನ್ಯಜೀವಿ ಹಾಗೂ ಅರಣ್ಯ ಸಂಪತ್ತು ನಾಶವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಒ ಮೋನಾ ರೋತ್, ಮುಖಂಡರಾದ ಮಲೆಯೂರು ಮಹೇಂದ್ರ, ಮುಕ್ಕಡಹಳ್ಳಿ ರಾಜು ಹಾಜರಿದ್ದರು.

Tags:
error: Content is protected !!