ಚಾಮರಾಜನಗರ

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ 491 ಕೋಟಿ ವೆಚ್ಚದ ಡಿಪಿಆರ್‌ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಹನೂರು ಪಟ್ಟಣದ ಪಶು ಚಿಕಿತ್ಸಾಲಯದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರವು ಅರಣ್ಯ ಪ್ರದೇಶದಿಂದ ಕೂಡಿದ್ದು ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶವಿದೆ. ಆದರೆ ಹನೂರು ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ವ್ಯವಸಾಯ ಮಾಡಲು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.

ಸ್ವಾತಂತ್ರ ಬಂದು 77 ವರ್ಷಗಳೇ ಪೂರ್ಣಗೊಂಡರು, ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಸರ್ಕಾರ ವಿಫಲವಾಗಿದೆ ಎಂದರು.

ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ನಿಂತು ಭಾರತ ದೇಶ ಆರ್ಥಿಕವಾಗಿ ಪ್ರಗತಿ ಹೊಂದುತ್ತಿದೆ ತಂತ್ರಜ್ಞಾನದಲ್ಲಿ ಮುಂದಿದ್ದು ಅಭಿವೃದ್ಧಿ ಪಥದತ್ತ ಮುನ್ನಡೆಯುತ್ತಿದೆ ಎಂದು ಭಾಷಣ ಮಾಡುತ್ತಾರೆ. ಆದರೆ ಹನೂರು ಭಾಗದ 5 ಹಳ್ಳಿಗಳ ವಾಸ್ತವ ಸ್ಥಿತಿಯನ್ನು ನೋಡಿದರೆ ಇವರಿಗೆ ನಮ್ಮ ದೇಶ ಎತ್ತ ಸಾಗುತ್ತಿದೆ ಎಂಬುದು ಮನವರಿಕೆಯಾಗುತ್ತದೆ ಎಂದರು.

ಪ್ರೊಫೆಸರ್ ನಂಜುಂಡಸ್ವಾಮಿ ರವರು ವಿಧಾನಸೌಧವು ಒಂದು ಕಲ್ಲಿನ ಕಟ್ಟಡ ಅದಕ್ಕೆ ಜೀವ ಇಲ್ಲದಿರುವುದರಿಂದ ಅಲ್ಲಿ ನಾವು ಯಾವುದೇ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ನಾವು ರಸ್ತೆಯಲ್ಲಿ ಚಳುವಳಿ ಮಾಡಿ ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ಪ್ರತಿ ಬಾರಿಯೂ ಹೇಳುತ್ತಿದ್ದರು. ಅದರಂತೆ 2009ರಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲಾ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ತಾರ್ಕಿಕ ಅಂತ್ಯ ಮಾಡಿದ್ದರ ಫಲವಾಗಿ ಕೆರೆಕಟ್ಟೆಗಳಿಗೆ ನೀರು ತುಂಬಿಸಲಾಗಿದೆ. ಆದರೆ ಜನಪ್ರತಿನಿಧಿಗಳು ಇದೆಲ್ಲಾ ನಾವು ತಂದಿರುವ ಯೋಜನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೂ ಯೋಜನೆ ಅನುಷ್ಠಾನಕ್ಕೆ ಬರುವುದಷ್ಟೇ ಮುಖ್ಯ ಎಂದರು.

ತಮಿಳುನಾಡು ಗಡಿಭಾಗದಲ್ಲಿರುವ ಗೋಪಿನಾಥಂ ಗ್ರಾಮದಲ್ಲಿ ಕುಡಿಯುವ ನೀರು ವಿದ್ಯುತ್ ಸಂಪರ್ಕವಿಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಜಿಲ್ಲಾಡಳಿತ ಅವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದರು.

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಪಾದಯಾತ್ರೆ ಹೊರಡಲಿದೆ. ಪ್ರಾರಂಭದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ. ನಂತರ 300ಕ್ಕೂ ಹೆಚ್ಚು ರೈತರು ನಿರಂತರವಾಗಿ ಪ್ರತಿಭಟನೆ ಮಾಡಲಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪದಾಧಿಕಾರಿಗಳು ಸಹಕಾರ ನೀಡಲಿದ್ದಾರೆ. ಈ ಪಾದಯಾತ್ರೆಯಲ್ಲಿ ಸಾರ್ವಜನಿಕರು ಸಹ ಪಾಲ್ಗೊಳ್ಳುವ ಮೂಲಕ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ಹಿರಿಯ ರೈತ ಮುಖಂಡ ಮಹೇಶ್ ಕುಮಾರ್ ಮಾತನಾಡಿ, ಸರ್ಕಾರ ಮಾನವ ವನ್ಯಪ್ರಾಣಿ ಸಂಘರ್ಷ ತಡೆಯುವ ಬದಲು ಸಫಾರಿ ಪ್ರಾರಂಭದ ಉತ್ಸಾಹದಲ್ಲಿದೆ. ಸರ್ಕಾರವು ರಾಜ್ಯದ ಅನೇಕ ಗ್ರಾಮಗಳಲ್ಲಿ ಉಂಟಾಗಿರುವ ತೀವ್ರ ಬರಗಾಲ, ನೀರು ಮತ್ತು ಆಹಾರ ಸಮಸ್ಯೆಗಳ ಕಡೆ ಸಮರ್ಪಕ ಗಮನ ಹರಿಸುತ್ತಿಲ್ಲ. ರೈತರು ಸಂಕಷ್ಟದಿಂದ ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಸರ್ಕಾರಕ್ಕೆ ಫಲ ನೀಡುವ ಸಫಾರಿ ಕೇಂದ್ರ ಆರಂಭಿಸುವುದರಲ್ಲೇ ಆಸಕ್ತಿ ತೋರುತ್ತಿದೆ ಎಂದು ಕಿಡಿಕಾರಿದರು

ಫೆಬ್ರವರಿ 25ರಿಂದ ಚಾಮರಾಜನಗರ ಜಿಲ್ಲೆಯ ಹನೂರು ಭಾಗದ ರೈತರು ಪಾದಯಾತ್ರೆಯ ಮೂಲಕ ಬೆಂಗಳೂರಿಗೆ ಆಗಮಿಸಿ, ನೀರಾವರಿ ಯೋಜನೆ ಕಲ್ಪಿಸುವಂತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಿದ್ದಾರೆ. ಕೂಡಲೇ ಸರಕಾರ ಎಚ್ಚೆತ್ತು ಆ ಭಾಗದ ನೀರಾವರಿ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ, ಬೆಂಗಳೂರಿಗೆ ಪ್ರವೇಶಿಸುತ್ತಿದ್ದಂತೆ ಮೊದಲು ಮುಖ್ಯಮಂತ್ರಿಗಳ , ಅರಣ್ಯ ಸಚಿವರ ಮನೆ ಮತ್ತು ನೀರಾವರಿ ಸಚಿವರ ಮನೆಗೆ ಸರಬರಾಜಾಗುವ ನೀರನ್ನು ಬಂದ್ ಮಾಡಿ ಅನಂತರ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಇದೆ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯ ಮಹದೇವ್ ಪ್ರಭು, ರಾಜ್ಯ ವಿಭಾಗೀಯ ಕಾರ್ಯದರ್ಶಿ ಹೊಸೂರು ಬಸವರಾಜು, ಮೈಸೂರು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ, ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಲೋಕೇಶ್, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪುಂಗುಡಿ, ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್, ಗುಂಡ್ಲುಪೇಟೆಯ ದಿಲೀಪ್ ಕೊಳ್ಳೇಗಾಲದ ಕೊಳ್ಳೇಗಾಲದ ಶಿವಮಲ್ಲು ರವಿ ನಾಯ್ಡು, ರಾಜಮಣೆ, ಭಾಸ್ಕರ್ ಸೇರಿದಂತೆ ಇನ್ನಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago