ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕಾವೇರಿ ನದಿ ಮೂಲಕ ಪಾದಯಾತ್ರೆ ಬರುವ ಬಸವನಕಡ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ ಐದು ದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ನೆರೆಯ ತಮಿಳುನಾಡು ರಾಜ್ಯಗಳಿಂದ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಕನಕಪುರ ರಾಮನಗರ, ಚನ್ನಪಟ್ಟಣ ಮಾಗಡಿ ತಾಲೂಕಿನಿಂದ ಪ್ರತಿ ವರ್ಷ ಲಕ್ಷಾಂತರ ಭಕ್ತಾದಿಗಳು ಕಾವೇರಿ ನದಿ ಸಂಗಮದ ಮೂಲಕ ಹಾದು ಬಸವನಕಡ ತಲುಪಿ ನಂತರ ಕಾವೇರಿ ವನ್ಯಜೀವಿ ದಾಮದ ಅರಣ್ಯ ಪ್ರದೇಶದ ಮೂಲಕ ಶಾಗ್ಯ, ಹಲಗಾಪುರ, ತೋಮಿಯಾರ್ ಪಾಳ್ಯ, ಡಿ ಎಮ್ ಸಮುದ್ರದ ಮೂಲಕ ಎಲ್ಲೇಮಾಳ ತಲುಪಿ ಮಲೆ ಮಹದೇಶ್ವರ ಮುಖ್ಯ ರಸ್ತೆಯ ಮೂಲಕ ತೆರಳುವುದು ವಾಡಿಕೆ.
ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಬಸವನಕಡ ಸ್ಥಳಕ್ಕೆ ಭೇಟಿ ನೀಡಿ ಪಾದಯಾತ್ರಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಕ್ರಮವಾಗಿ ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿದರು.
ನಂತರ ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಈ ಬಾರಿಯೂ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಿರೀಕ್ಷೆಗೂ ಮೀರಿ ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಕೆ ಆರ್ ಎಸ್ ಜಲಾಶಯದಿಂದ ನೀರಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಭಕ್ತಾದಿಗಳು ಅರಣ್ಯ ಪ್ರದೇಶದ ಮೂಲಕ ತೆರಳುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಪಾದಯಾತ್ರೆ ತೆರಳುವ ಮಾರ್ಗದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಕಾವೇರಿ ನದಿಯನ್ನು ದಾಟಿ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಬೇಕಿರುವುದರಿಂದ ಮುಂಜಾಗ್ರತ ಕ್ರಮವಾಗಿ ಎಸ್ಟಿಆರ್ಎಫ್ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಹೆಚ್ಚು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಸಹ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವುದರಿಂದ ಬೆಳಕು ಇರುವ ಸಮಯದಲ್ಲಿ ಮಾತ್ರ ತಾವು ಪಾದಯಾತ್ರೆ ಮಾಡಬೇಕು. ತಮ್ಮ ಆಚಾರ ವಿಚಾರ ಸಂಸ್ಕೃತಿಗಳಿಗೆ ಯಾವುದೇ ಧಕ್ಕೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಲಾಗುವುದು. ಭಕ್ತರು ಸಹ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೆ ಕೈಜೋಡಿಸುವ ಮೂಲಕ ತಮ್ಮ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕು. ನಾವು ನಿಮಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪಾದಯಾತ್ರಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಾದಯಾತ್ರೆಯ ಮಾರ್ಗದಲ್ಲಿ ಆರೋಗ್ಯ ಇಲಾಖೆ ವತಿಯಿಂದ ತುರ್ತು ಚಿಕಿತ್ಸೆ ಕೇಂದ್ರಗಳನ್ನು ತಜ್ಞ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲ ಕ್ರಮ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಜನವರಿ.23 ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಬೆಂಗಳೂರು ದಕ್ಷಿಣ ಜಿಲ್ಲೆಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಪಾದಯಾತ್ರಿಕರಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿರುವುದನ್ನು ಸ್ಮರಿಸಬಹುದು.
ಪರಿಶೀಲನೆ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ತಹಸೀಲ್ದಾರ್ ಚೈತ್ರ, ಮಲೆ ಮಹದೇಶ್ವರ ವನ್ಯ ಧಾಮದ ಡಿಸಿಎಫ್ ಭಾಸ್ಕರ್, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಎ ಸಿಎಫ್ ವಿರಾಟ್ ಹೊಸೂರು, ಮರಿಸ್ವಾಮಿ ಇನ್ಸ್ಪೆಕ್ಟರ್ ಆನಂದಮೂರ್ತಿ, ಆರ್ಎಫ್ ಒ ನಿರಂಜನ್, ಕಂದಾಯ ನಿರೀಕ್ಷಕ ಮಲ್ಲೇಶ್, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.




