ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ, ಸಮಸ್ಯೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಹನೂರು ತಾಲೂಕಿನ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಕುಡಿಯುವ ನೀರು ಪೂರೈಕೆ ಮಾಡಲು ತ್ವರಿತ ಕ್ರಮ ವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಚಾಮರಾಜನಗರ ಮತ್ತು ಹನೂರು ತಾಲೂಕಿನ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಹನೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಳೆಯಾಗದೆ ನೀರಿಗೆ ಪರಿತಪಿಸುತ್ತಿರುವ ಬಗ್ಗೆ ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿದೆ. ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗದಿರುವ ಬಗ್ಗೆ ದೂರುಗಳು ಬಂದಿದೆ ಎಂದು ಮಾಹಿತಿ ನೀಡಿದರು.
ಕುಡಿಯುವ ನೀರು ಪೂರೈಕೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಸಾರ್ವಜನಿಕರು ಹಾಗೂ ಜನಜಾನುವಾರುಗಳಿಗೆ ಯಾವುದೇ ಸಮಸ್ಯೆ ಆಗದಂತೆ ಕಳೆದ ಎರಡು ತಿಂಗಳಿನಿಂದ ಟ್ಯಾಂಕರ್ ನೀರು ಪೂರೈಕೆ ಮಾಡುತ್ತಿದ್ದಾರೆ. ಅದೇ ರೀತಿ ನಮ್ಮ ಸರ್ಕಾರವು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬದ್ಧವಾಗಿದೆ ಎಂದರು.
ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿತ್ತು. ಆದರೆ, ವಾಸ್ತವ ತಿಳಿದುಕೊಳ್ಳಲು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆಯಾಗದೆ ರೈತರು ಸಂಕಷ್ಟಕ್ಕೇಡಾಗಿದ್ದಾರೆ ಈ ಸಂಬಂಧ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಸರ್ಕಾರಕ್ಕೆ ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಲು ವರದಿ ನೀಡಿದ್ದಾರೆ, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.
ಹನೂರು ತಾಲೂಕಿನಲ್ಲಿ ಮಾನವ- ವನ್ಯಜೀವಿ ಸಂಘರ್ಷ ಸಂಘರ್ಷ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿ, ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮಾನವ ಪ್ರಾಣಿ ಸಂಘರ್ಷ ತಡೆಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಅಗತ್ಯ ಕ್ರಮ ವಹಿಸಲಾಗುವುದು, ಮಲೆ ಮಹದೇಶ್ವರ ವನ್ಯಜೀವಿಧಾಮ, ಕಾವೇರಿ ವನ್ಯಜೀವಿಧಾಮಗಳಿಗೆ ಬೇರೆಡೆಯಿಂದ ಚಿರತೆಗಳನ್ನು ಬಿಡುತ್ತಿಲ್ಲ ಒಂದೊಮ್ಮೆ ಬಿಡಲು ಮುಂದಾದರೇ ತಡೆಯಲು ಕ್ರಮ ವಹಿಸುತ್ತೇನೆ ಎಂದು ಭರವಸೆ ಕೊಟ್ಟರು.
ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಲೋಪ ಇರುವ ಮಾಹಿತಿ ಬಂದಿದೆ.ಅರಣ್ಯ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು, ಚಿರತೆ ಸೆರೆಗೆ ಜಿಲ್ಲಾಡಳಿತದ ವತಿಯಿಂದ ಥರ್ಮಲ್ ಡ್ರೋಣ್ ನೀಡಲಾಗಿದೆ. ಅರಣ್ಯ ಇಲಾಖೆಯವರು ಕೂಡ ಚಿರತೆ ಸೆರೆಗೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ, ಕಾದು ನೋಡೋಣ ಎಂದರು.
ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಶಾಸಕ ಎಂಆರ್ ಮಂಜುನಾಥ್, ಜಿಲ್ಲಾಧಿಕಾರಿ ಶ್ರೀ ರೂಪ, ಜಿಪಂ ಸಿಇಓ ಮೊನಾರೋತ್, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಉಪ ಕಾರ್ಯದರ್ಶಿ ಶೃತಿ, ತಹಸಿಲ್ದಾರ್ಗಳಾದ ಚೈತ್ರಾ ಹಾಗೂ ಬಸವರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ಪಿ ಮೋಹನ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಇಒ ಉಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಸಂತೋಷ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.




