ಚಾಮರಾಜನಗರ : ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿಣ ಮಂಡಳಿ ವ್ಯಾಪ್ತಿಗೆ ಸೇರಿಸಲು ಕೋರಿ ಇಲ್ಲಿನ ಲೋಕಾಸಭಾ ಸದಸ್ಯ ಸುನೀಲ್ ಬೋಸ್ ಸೋಮವಾರ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆಯು ಅರಿಶಿನ ಬೆಳೆಯುವಲ್ಲಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯವು ದೇಶದಲ್ಲಿ ಅರಿಶಿನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ.
ಸುಮಾರು 8260 ಹೆಕ್ಟೇರ್ ಪ್ರದೇಶದಲ್ಲಿ ಅರಿಶಿನ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಅಂದಾಜು 49,564.80 ಮೆಟ್ರಿಕ್ ಟನ್ ಗಳಷ್ಟು ಅರಿಶಿಣ ಉತ್ಪಾದನೆ ಆಗುತ್ತಿದೆ, ಇದು ದೇಶದ ಶೇ. 4.2ರಷ್ಟು ಹಾಗೂ ರಾಜ್ಯದ ಶೇ.38.3ರಷ್ಟು. ಇಷ್ಟು ಉತ್ಪಾದನೆಯಿರುವ ಜಿಲ್ಲೆಯ ರೈತರಿಗೆ ಸೂಕ್ತ ಮಾರುಕಟ್ಟೆ ಸೌಕರ್ಯವಿಲ್ಲ, ಅರಿಸಿನ ಮೌಲ್ಯವರ್ಧನ ಚಟುವಟಿಕೆಗಳಿಗೆ ಅವಕಾಶವಿಲ್ಲಾ, ಬೆಳೆ ಇಳುವರಿ ಹೆಚ್ಚಿಸುವ ತಂತ್ರಜ್ಞಾನದ ಕೊರತೆ ಇದೆ, ಸಮರ್ಪಕ ಗೊಬ್ಬರ ಮತ್ತು ಕೀಟನಾಶಕ ಸಮರ್ಪಕ ಬಳಕೆ ಕುರಿತ ಮಾರ್ಗದರ್ಶನವಿಲ್ಲ, ಆದರು ಕೂಡ ದೇಶದ ಅರಿಶಿನ ಉತ್ಪಾದನೆಯಲ್ಲಿ ಚಾಮರಾಜನಗರದ ಕೊಡುಗೆ ಶೇಕಡ 4.2 ರಷ್ಟಿದೆ. ಚಾಮರಾಜನಗರ ಜಿಲ್ಲೆಯ ರೈತರಿಗೆ ಅರಿಶಿನ ಬೆಲೆಗೆ ಸಂಬಂಧಿಸಿದಂತೆ ನಾವಿನ್ಯ ತಂತ್ರಜ್ಞಾನಗಳ ಕೊರತೆ ಇದ್ದು ಹಾಗೂ ವೈಜ್ಞಾನಿಕ ಬೆಳೆ ಪದ್ಧತಿ ಬಗ್ಗೆ ಅರಿವಿನ ಕೊರತೆ ಇದೆ ಆದ್ದರಿಂದ ರಾಷ್ಟ್ರೀಯ ಅರಿಶಿನ ಮಂಡಳಿ ಕಾರ್ಯ ಚಟುವಟಿಕೆಗಳನ್ನು ಚಾಮರಾಜನಗರ ಜಿಲ್ಲೆಗೆ ವಿಸ್ತರಿಸುವುದರಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಿ ರೈತರ ಆದಾಯದಲ್ಲಿ ಸುಧಾರಣೆ ಆಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





