ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು, 22 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ.
ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘುರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.
ಎಣಿಕೆ ಕಾರ್ಯವು ಸಂಜೆ 5:30 ಗಂಟೆಯವರೆಗೂ ನಡೆಯಿತು. ಬೇಸಿಗೆ ರಜೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,16,34,566 ರೂ. ನಗದು 24 ಗ್ರಾಂ ಚಿನ್ನ ಹಾಗೂ 1 ಕೆಜಿ 550 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇ-ಹುಂಡಿಯಿಂದ 5,15,231ರೂ., ಚಲಾವಣೆಯಲ್ಲಿ ಇಲ್ಲದ 2000ರೂ. ಮುಖಬೆಲೆಯ 6 ನೋಟುಗಳು, ವಿದೇಶಿ 3 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ.
ಇದೇ ವೇಳೆ ಉಪ ಕಾರ್ಯದರ್ಶಿ ಚಂದ್ರಶೇಖರ್ ಜಿಲ್ಲಾಡಳಿತ ಕಚೇರಿಯ ಸ್ವರ್ಣ, ನಾಮ ನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರಾದ ಮಹದೇವ್, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.




