ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವದ ಸುದ್ದಿ ಹಬ್ಬುತ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು ಪೆಟ್ರೋಲ್ ಬಂಕ್ಗಳಿಗೆ ಮುಗಿ ಬೀಳುತ್ತಿದ್ದಾರೆ.
ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್ಗಳು ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದೆ. ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು ಜನರು ಹರಸಾಹಸ ಪಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ವಾಹನಗಳ ದೀರ್ಘ ಸಾಲುಗಳು ಟ್ರಾಫಿಕ್ ಸಮಸ್ಯೆಯನ್ನೂ ಉಂಟುಮಾಡಿದೆ.
ಬಂಕ್ ಸಿಬ್ಬಂದಿ, ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಲಭ್ಯವಿದೆ. ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದರೂ ಜನರು ಮಾತ್ರ ಖರೀದಿಗೆ ಧಾವಿಸುತ್ತಲೇ ಇದ್ದಾರೆ.




