ಚಾಮರಾಜನಗರ

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಾಸ್ಟರ್ ಪ್ಲಾನ್ ಆವರಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಸಿಬ್ಬಂದಿ ವರ್ಗದವರ ಜೊತೆ ಪರಿಶೀಲನೆ ನಡೆಸಿದರು.

ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಪಾದಯಾತ್ರೆಯ ಮೂಲಕ ಹಾಗೂ ವಾಹನಗಳ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ 10 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಜಾತ್ರೆಗೂ ಹತ್ತು ದಿನಗಳ ಮುನ್ನವೇ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

ಪ್ಲಾಸ್ಟಿಕ್ ನಿಷೇಧ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತಾದಿಗಳಿಗೆ ದಾನಿಗಳು ಪ್ಲಾಸ್ಟಿಕ್ ಬಾಟಲ್ ನೀರು, ಹಣ್ಣು, ಜ್ಯೂಸ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ಶಿವರಾತ್ರಿ ಜಾತ್ರಾ ಮಹೋತ್ಸವದಿಂದ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಪ್ಲಾಸ್ಟಿಕ್ ನೀರಿನ ಬಾಟಲ್ ವಿತರಣೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಈಗಾಗಲೇ ತಾಳು ಬೆಟ್ಟದಲ್ಲಿ ತೆರೆದಿರುವ ಚೆಕ್‌ಪೋಸ್ಟ್‌ನಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ತರುವ ವಾಹನಗಳನ್ನು ತಡೆಯಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಭಕ್ತಾದಿಗಳು ಸಹ ಪ್ಲಾಸ್ಟಿಕ್ ಬಳಕೆ ಮಾಡದೆ ಪ್ಲಾಸ್ಟಿಕ್ ಮುಕ್ತ ಮಲೆ ಮಾದೇಶ್ವರ ಬೆಟ್ಟವನ್ನು ಮಾಡಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಾದಯಾತ್ರಿಕರಿಗೆ ಪ್ರತ್ಯೇಕ ಕ್ಯೂಲೈನ್: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕನಕಪುರ ರಾಮನಗರ ಮಂಡ್ಯ ಮೈಸೂರು ಚಾಮರಾಜನಗರ ತಮಿಳುನಾಡಿನಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವುದು ವಿಶೇಷ. ಈ ಹಿನ್ನೆಲೆ ಪ್ರಾಧಿಕಾರದ ಕಚೇರಿ ಸಮೀಪದ ಅರಳಿ ಮರದ ಮುಂಭಾಗದಿಂದ ಪ್ರತ್ಯೇಕ ಕ್ಯೂಲೈನ್ ನಿರ್ಮಾಣ ಮಾಡಿ ರಾಜಗೋಪುರ ಮುಖ್ಯದ್ವಾರ ಹಾಗೂ 250 ಟಿಕೆಟ್ ಕೌಂಟರ್ ಮೂಲಕ ಉಚಿತ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿಶ್ರಾಂತಿಗಾಗಿ ನೆರಳಿನ ವ್ಯವಸ್ಥೆ: ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ವಿಶ್ರಾಂತಿ ತೆಗೆದುಕೊಳ್ಳಲು ರಾಜಗೋಪುರದ ಬಲ ಭಾಗದಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಸ್ವಚ್ಛತಾ ಕಾರ್ಯಗಳು ಪೂರ್ಣಗೊಂಡಿದ್ದು ಶುದ್ಧ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆಯಲು ಬರುವ ಭಕ್ತಾದಿಗಳಿಗೂ ಪ್ರತಿ ಗೇಟ್ ನಲ್ಲಿಯೂ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.

ತುರ್ತು ಚಿಕಿತ್ಸೆ ಕೇಂದ್ರ ಪ್ರಾರಂಭ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಪಾದಯಾತ್ರಿಕರಿಗೆ ರಾಜಗೋಪುರದ ಬಲ ಭಾಗ ನೆರಳಿನ ವ್ಯವಸ್ಥೆ ಕುಡಿಯುವ ನೀರಿನ ಜೊತೆಗೆ ತುರ್ತು ಚಿಕಿತ್ಸಾ ಆರೋಗ್ಯ ಕೇಂದ್ರವನ್ನು ಪ್ರಾರಂಭಿಸಿ ಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗಿದೆ. ಇದಲ್ಲದೆ ವಿಶೇಷವಾಗಿ ವಿಶ್ರಾಂತಿ ಪಡೆಯುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಬಿಸಿಬೇಳೆ ಬಾತ್ ಹಾಗೂ ಮೊಸರನ್ನ ವಿತರಣೆ ಮಾಡಲು ಕ್ರಮ ವಹಿಸಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ 15 ಕಡೆ ಕುಡಿಯುವ ನೀರಿನ ಟ್ಯಾಂಕ್ ಇಟ್ಟು ನೀರು ಪೂರೈಕೆ ಮಾಡಲಾಗುತ್ತಿದೆ. ಮೊಬೈಲ್ ಶೌಚಾಲಯ ನಿರ್ಮಾಣ ಮಾಡಲು ಅರಣ್ಯ ಇಲಾಖೆಯ ಅನುಮತಿಗಾಗಿ ಪತ್ರ ಬರೆಯಲಾಗಿದೆ. ಅನುಮತಿ ಸಿಕ್ಕ ನಂತರ ಆನೆ ತಲೆದಿಂಬ, ರಂಗಸ್ವಾಮಿ ಒಡ್ಡು ಹಾಗೂ ತಾಳಬೆಟ್ಟ ತಿರುವಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಆರು ಮೊಬೈಲ್ ಶೌಚಾಲಯ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

ಡಾರ್ಮೆಟ್ರಿ ರಸ್ತೆಗೆ ಡಾಂಬರೀಕರಣ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತ ಭಕ್ತಾದಿಗಳು ಪರ ಮಾಡುವುದು ಸಂಪ್ರದಾಯ. ಅದರಂತೆ ಡಾರ್ಮೆಟ್ರಿ ರಸ್ತೆ ಹದಗೆಟ್ಟಿರುವುದರಿಂದ ಅಭಿವೃದ್ಧಿ ಪಡಿಸಲಾಗುತ್ತಿದೆ ಗುರುವಾರದಿಂದ ಡಾಂಬರೀಕರಣ ಕಾಮಗಾರಿ ಪ್ರಾರಂಭವಾಗಲಿದ್ದು ಪರ ಮಾಡುವ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ನಂತರ ಕೊಳ್ಳೇಗಾಲ ಚೆಕ್ ಪೋಸ್ಟ್ ನಿಂದ ಜೆಎಸ್ಎಸ್ ಮಠದ ರಸ್ತೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ರಸ್ತೆಯನ್ನು ಸಮತಟ್ಟು ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಜಾತ್ರೆ ಮುಗಿದ ನಂತರ ಸಿಸಿ ರಸ್ತೆ ಕಾಮಗಾರಿ ಮುಂದುವರಿಸಲಾಗುವುದು ಎಂದು ಕಾರ್ಯದರ್ಶಿರವರು ಪತ್ರಿಕೆಗೆ ತಿಳಿಸಿದರು.

ಪಾದಯಾತ್ರಿಕರ ಭದ್ರತೆಗೆ 50 ಗೃಹ ರಕ್ಷಕ ದಳದ ಸಿಬ್ಬಂದಿ ನೇಮಕ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಕಳೆದ ತಿಂಗಳು ಚಿರತೆ ದಾಳಿ ಮಾಡಿದ ಪರಿಣಾಮ ಭಕ್ತ ಮೃತಪಟ್ಟಿದ್ದ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಾದಯಾತ್ರೆಯ ಮೂಲಕ ಬರುವ ಭಕ್ತಾದಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಧಿಕಾರದ ವತಿಯಿಂದ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ವರೆಗೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರ ಜೊತೆಗೆ 50 ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ದಸರಾ ಮಾದರಿ ದೀಪಾಲಂಕಾರ: ನಾಡ ಹಬ್ಬ ದಸರಾ ಮಾದರಿಯಲ್ಲಿಯೇ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣ 108 ಅಡಿ ಮಹದೇಶ್ವರ ಪ್ರತಿಮೆ ಕೊಳ್ಳೇಗಾಲ ಚೆಕ್ ಪೋಸ್ಟ್ ಹಾಗೂ ತಾಳು ಬೆಟ್ಟದಲ್ಲಿ ವಿಶೇಷ ದೀಪಾಲಂಕಾರ ವ್ಯವಸ್ಥೆ ಮಾಡಲು ಕ್ರಮವಹಿಸಲಾಗಿದೆ. ಫೆಬ್ರವರಿ ಎಂಟರಿಂದಲೇ ವಿನೂತನ ಮಾದರಿಯಲ್ಲಿ ದೀಪಾಲಂಕಾರ ಪ್ರಾರಂಭವಾಗಲಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ 10 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ. ಬರುವಂತಹ ಭಕ್ತಾದಿಗಳಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ, ವಿಶೇಷ ದಾಸೋಹ ಸೇರಿದಂತೆ ಎಲ್ಲ ರೀತಿಯ ಅನುಕೂಲಗಳನ್ನು ಕಲ್ಪಿಸಲಾಗುತ್ತಿದೆ. ಪಾದಯಾತ್ರೆಯ ಮೂಲಕ ಬರುವ ಭಕ್ತಾದಿಗಳ ಸುರಕ್ಷತೆ ದೃಷ್ಟಿಯಿಂದ ಅಗತ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಒಟ್ಟಾರೆ ಜಾತ್ರಾ ಯಶಸ್ವಿಗೆ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಎಈ ರಘು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

5 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago