ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ ಹಾಗೂ ವಿವಿಧ ಉತ್ಸವಗಳು ಜರುಗಿದವು.
ದೇಗುಲದಲ್ಲಿ ಶನಿವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ಆರಂಭಗೊಂಡಿತು. ಶನಿವಾರ ರಾತ್ರಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ಸತ್ತಿಗೆ, ಸೂರಿಪಾನಿ, ಛತ್ರಿ, ಚಾಮರ ಹಾಗೂ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆಯ ಮೂಲಕ ಸಾಲೂರು ಮಠಕ್ಕೆ ಕೊಂಡೊಯ್ದು ಪೂಜೆ ನೆರವೇರಿಸಲಾಯಿತು.
ಸಾಲೂರು ಬೃಹನೃಠದಲ್ಲಿ ಉತ್ಸವ ಮೂರ್ತಿಗೆ ಅಗ್ರ ಪೂಜೆಯನ್ನು ನೆರವೇರಿಸಿ ಮಾದಪ್ಪನ ಸನ್ನಿಧಿಗೆ ಪೊಡಮಟ್ಟು ಕಳುಹಿಸಿಕೊಡಲಾಯಿತು. ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ಪೂಜೆ ಸಲ್ಲಿಸಲಾಯಿತು. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ಸಂಜೆ 6.30ರಿಂದ ರಾತ್ರಿ 8.30 ಗಂಟೆಯವರೆಗೆ ಸ್ವಾಮಿಗೆ ಬೇಡಗಂಪಣ ಸಮುದಾಯದ ಸರದಿ ಅರ್ಚಕರಿಂದ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಲಾಯಿತು.
ದೀಪ, ಧೂಪದಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಶಿವರಾತ್ರಿ ಅಂಗವಾಗಿ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ವಿವಿಧ ಹಣ್ಣು ಹಾಗೂ ಪುಷ್ಪಗಳಿಂದ ವಿಶೇಷವಾಗಿ ಸಿಂಗಾರ ಮಾಡಲಾಗಿತ್ತು.
ಮಹಾ ಶಿವರಾತ್ರಿ ಜಾತ್ರೆ ಅಂಗವಾಗಿ ಒಂದು ವಾರದಿಂದ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಕಾಲ್ನಡಿಗೆ ಮೂಲಕ ಆಗಮಿಸಿ ಮ.ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದರು. ಭಾನುವಾರ ರಾತ್ರಿ ಜರುಗಿದ ಜಾಗರಣೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಮಧ್ಯಾಹ್ನದ ನಂತರ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿತ್ತು. ರಾತ್ರಿ ದೇಗುಲದ ಆವರಣ ಹಾಗೂ ರಂಗ ಮಂದಿರದಲ್ಲಿ ನೆರೆದಿದ್ದ ಮಂದಿ ಶಿವನ ಧ್ಯಾನ ಮಾಡಿದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಚಿನ್ನದ ಕಿರೀಟ ಧಾರಣೆ: ಮಹಾಶಿವರಾತ್ರಿ ಜಾತ್ರಾಮಹೋತ್ಸವ ಪ್ರಯುಕ್ತ ಭಾನುವಾರ ಮಲೆ ಮಹದೇಶ್ವರ ಸ್ವಾಮಿಗೆ ಚಿನ್ನದ ಕಿರೀಟ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚಿನ್ನದ ರಥೋತ್ಸವ: ಬುಧವಾರ ಸಂಜೆ 7 ಗಂಟೆಗೆ ನಡೆದ ಚಿನ್ನದ ತೇರಿನ ಉತ್ಸವವು ಲಕ್ಷಾಂತರ ಜನರ ಸಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ತೇರನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಹೊತ್ತ ಜನರು ದಂಡಿನ ಕೋಲನ್ನು ಹೊತ್ತು ಸಾಗಿದರು. ಇದಲ್ಲದೆ ವಿವಿಧ ಸೇವೆಗಳನ್ನು ಸಮರ್ಪಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದುವರೆಗೆ ಸುಮಾರು 3 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಫೆಬ್ರವರಿ 18ರಂದು ನಡೆಯಲಿರುವ ಮಹಾರಥೋತ್ಸವ, ಕೊಂಡೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಹೇಳಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…