ಚಾಮರಾಜನಗರ

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹನೂರು ಪಟ್ಟಣ ಪಂಚಾಯಿತಿಗೆ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಾರದೆ ಇರುವುದರಿಂದ ಪಟ್ಟಣದ 13 ವಾರ್ಡ್ ಗಳಲ್ಲಿ ಮೂಲಭೂತ ಸೌಲಭ್ಯ ಇಲ್ಲದೆ ಜನರು ಪರಿತಪಿಸುತ್ತಿರುವುದು ಗಮನಕ್ಕೆ ಬಂದಿದೆ.

ಈಗಾಗಲೇ 7ನೇ ವಾರ್ಡಿನಲ್ಲಿ ಕನಿಷ್ಠ ಮೂಲಭೂತ ಸೌಲಭ್ಯವು ಇಲ್ಲದೆ ಇರುವುದರಿಂದ 50 ಲಕ್ಷ ವಿಶೇಷ ಅನುದಾನದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ. ಯೋಜನೆ ನಿರ್ಮಾಣ ಮಾಡಲು 81 ಕೋಟಿ ವೆಚ್ಚದಲ್ಲಿ ಡಿಪಿಆರ್ ಮಾಡಲಾಗಿದೆ. ಪಟ್ಟಣದ ಹದಿಮೂರು ವಾರ್ಡ್ ಗಳಿಗೂ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು 30 ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ಮಾಡಲಾಗಿದೆ. ಈ ಸಾಲಿನ ಬಜೆಟ್ ನಲ್ಲಿ ಅನುದಾನ ನೀಡಿದರೆ ಪಟ್ಟಣವನ್ನು ಅಭಿವೃದ್ಧಿ ಮಾಡಲು ಕ್ರಮವಹಿಸಲಾಗುವುದು ಎಂದರು. ಇನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಸ್ವತ್ತು ಸಮಸ್ಯೆ ಇರುವುದರಿಂದ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಡ್ರೋನ್ ಸರ್ವೆ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಗೂ ಈ ಸ್ವತ್ತು ವಿತರಣೆ ಮಾಡಲಾಗುವುದು. ಸಾರ್ವಜನಿಕರು ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪಟ್ಟಣ ವ್ಯಾಪ್ತಿಯಲ್ಲಿ ಯುಜಿಡಿ ಹಾಗೂ ಅಮೃತ ಯೋಜನೆ ಅಡಿ ಮನೆಮನೆಗೂ ಕುಡಿಯುವ ನೀರಿನ ಸಂಪರ್ಕ ನೀಡಲು ರಸ್ತೆ ಹರಿಯುತ್ತಿರುವುದರಿಂದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ. ಸಂಪೂರ್ಣ ಕಾಮಗಾರಿ ಮುಗಿದ ನಂತರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗಡಿ ಮಳಿಗೆಗಳಿಂದ ಸಮರ್ಪಕವಾಗಿ ಬಾಡಿಗೆ ವಸೂಲಾತಿ ಮಾಡದೇ ಇರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ, ಮುಂದಿನ ದಿನಗಳಲ್ಲಿ ವಾಣಿಜ್ಯ ಮಳಿಗೆ ಮಾಲೀಕರಿಗೆ ನೋಟಿಸ್ ನೀಡಿ ವಸೂಲಾತಿ ಮಾಡಬೇಕು, ಏಕಾಏಕಿ ಬಾಗಿಲು ಮುಚ್ಚುವುದು ಬೇಡ ಅವರು ಸಹ ಬಾಡಿಗೆ ಕಟ್ಟಲು ಬದ್ಧರಾಗಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು.

ಪಟ್ಟಣದ ದಲಿತ ಮುಖಂಡ ಕಿರಣ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆ ಸ್ವಚ್ಛತೆ ಸಮರ್ಪಕವಾಗಿ ಆಗದೆ ಇರುವುದರಿಂದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಗ್ರಾಮ ಠಾಣ ವ್ಯಾಪ್ತಿಯಲ್ಲಿರುವ ನಿವೇಶನಗಳಿಗೆ ಈ ಸ್ವತ್ತು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸಿದ್ದರಾಜು ಮಾತನಾಡಿ ಹನೂರು ಪಟ್ಟಣದ 1,2,4 ವಾರ್ಡ್ ಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಈ ಪೈಕಿ ಕೆಲವರಿಗೆ ಸರ್ಕಾರದಿಂದಲೇ ನಿವೇಶನ ನೀಡಲಾಗಿದೆ ಹಾಗಿದ್ದರೂ ಪಟ್ಟಣ ಪಂಚಾಯಿತಿಯವರು ಈ ಸ್ವತ್ತು ಮಾಡಿಕೊಡದೆ ಕಚೇರಿಗೆ ಅಲೆದಾಟ ಮಾಡಿಸುತ್ತಿದ್ದಾರೆ. ನಿಮ್ಮ ಬಳಿಯೇ ದಾಖಲೆ ಇಲ್ಲದಿದ್ದ ಮೇಲೆ ಇನ್ನು ಸಾರ್ವಜನಿಕರ ಬಳಿ ಎಲ್ಲಿ ದಾಖಲಾತಿ ಸಿಗುತ್ತದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಪಟ್ಟಣ ಪಂಚಾಯಿತಿ ವತಿಯಿಂದ ಮಾಡಿರುವ ಕಾಮಗಾರಿಗಳೆಲ್ಲ ಕಳಪೆ ಕಾಮಗಾರಿಯಾಗಿರುವುದರಿಂದ ಚರಂಡಿ ರಸ್ತೆ ಆರು ತಿಂಗಳಿಗೆ ಕುಸಿಯುತ್ತಿದೆ. ಕೆಲವು ಅಧಿಕಾರಿಗಳು ಆಸ್ತಿಯ ಮಾಲೀಕರು ಹೆಸರನ್ನೇ ತಿದ್ದುಪಡಿ ಮಾಡಿದ್ದಾರೆ ಇದರಿಂದ ಬಡವರು ಕೋರ್ಟ್ ಸುತ್ತುತ್ತಿದ್ದಾರೆ ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು, ಕಳೆದ 35 ವರ್ಷಗಳಿಂದ ಬಡವರಿಗೆ ಯಾವುದೇ ನಿವೇಶನ ಹಂಚಿಕೆ ಮಾಡಿಲ್ಲ ಈ ಕೂಡಲೇ ಅಧಿಕಾರಿಗಳು ಸರ್ಕಾರಿ ನಿವೇಶನವನ್ನು ಗುರುತಿಸಿ ಪೌರಕಾರ್ಮಿಕರು ಹಾಗೂ ಬಡವರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ನಾಮನಿರ್ದೇಶಿತ ಸದಸ್ಯ ಮಹಾದೇಶ್ ಮಾತನಾಡಿ ಹನೂರು ಪಟ್ಟಣದ ಪೆಟ್ರೋಲ್ ಬಂಕ್ ಸಮೀಪದ ವೃತ್ತಕ್ಕೆ ನಾಡಪ್ರಭು ಕೆಂಪೇಗೌಡ ವೃತ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೊಂಡಿದೆ. ಆದರೆ ಅಧಿಕಾರಿಗಳು ದಾಖಲಾತಿಗಳನ್ನು ಇನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿಕೊಡದೆ ಇರುವುದರಿಂದ ವೃತ್ತ ನಾಮಕರಣ ಪ್ರಕ್ರಿಯೆ ವಿಳಂಬವಾಗಿದೆ ಈ ಕೂಡಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ , ಪುತ್ತಳಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಶಾಸಕ ಎಂಆರ್ ಮಂಜುನಾಥ್ ಪ್ರತಿಕ್ರಿಯಿಸಿ ಈಗಾಗಲೇ ನಾಡಪ್ರಭು ಕೆಂಪೇಗೌಡ ವಿರುದ್ಧದ ಸಂಬಂಧ ಸಮುದಾಯದವರು ಹಲವಾರು ಬಾರಿ ಗಮನಕ್ಕೆ ತಂದಿದ್ದಾರೆ ಈ ಕೂಡಲೇ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಕಳುಹಿಸಿ ಸರ್ಕಾರಕ್ಕೆ ವರದಿ ನೀಡಿ ನಾನು ಸಂಬಂಧಪಟ್ಟವರ ಜೊತೆ ಚರ್ಚಿಸಿ ವೃತ್ತ ನಾಮಕರಣಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಮಹಾದೇಶ್ ಮಾತನಾಡಿ, ಪ್ರತಿ ವರ್ಷ ಪಟ್ಟಣ ಪಂಚಾಯಿತಿ ಬಜೆಟ್ ನಲ್ಲಿ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ 5 ಲಕ್ಷ ಮೀಸಲಿಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಕೇವಲ ಹತ್ತು ಸಾವಿರ ಮಾತ್ರ ಖರ್ಚಾಗಿದೆ, ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪತ್ರಕರ್ತರಿಗೆ ಆ ಹಣದಲ್ಲಿ ಲ್ಯಾಪ್ಟಾಪ್ ವಿತರಣೆ ಮಾಡಬೇಕು ಎಂದು ಮನವಿ ಮಾಡಿದರು. ಶಾಸಕರು ಮುಂದಿನ ದಿನಗಳಲ್ಲಿ ಲ್ಯಾಪ್ ಟಾಪ್ ನೀಡಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಯುವ ಮುಖಂಡ ಪ್ರಸನ್ನ ಮಾತನಾಡಿ, ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಯಾರಾದರೂ ಮೃತಪಟ್ಟರೆ ಶವ ಸಂಸ್ಕಾರ ಮಾಡಲು ಶವ ಸಾಗಿಸುವ ಯಂತ್ರ ಇಲ್ಲದೆ ತೊಂದರೆಯಾಗುತ್ತಿದೆ ಶಾಸಕರ ಅನುದಾನದಲ್ಲಿ ಸಹ ಸಾಗಿಸುವ ವಾಹನ ನೀಡಬೇಕು ಎಂದು ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ತಹಸಿಲ್ದಾರ್ ಚೈತ್ರ ಮುಖ್ಯಾಧಿಕಾರಿ ರೇಖಾ, ಸಮುದಾಯ ಸಂಘಟನಾಧಿಕಾರಿ ಚಂದ್ರಕುಮಾರ್, ಆರೋಗ್ಯ ನಿರೀಕ್ಷಕ ಪ್ರಕಾಶ್, ದ್ವಿತೀಯ ದರ್ಜೆ ಸಹಾಯಕರುಗಳಾದ ಮಾದೇಶ್, ಪ್ರತಾಪ್ ಮಾಜಿ ಅಧ್ಯಕ್ಷರಾದ ಮಮ್ತಾಜ್ ಬಾನು, ಬಾಲರಾಜ್ ನಾಯ್ಡು ಮಾಜಿ ಸದಸ್ಯೆ ಲತಾಮಣಿ ಮುಖಂಡರಾದ ಸಿದ್ದೇಗೌಡ, ವಿಜಯಕುಮಾರ್, ಗುರುಸ್ವಾಮಿ, ಮಹದೇವ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago