ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಬೆಂಗಳೂರು ಮೂಲದ ಮೆಡಿಕಲ್ ಕಾಲೇಜೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಇಂದು ಪ್ರವಾಸದ ನಿಮಿತ್ತ ಶಿವನಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಲ್ವರು ವಿದ್ಯಾರ್ಥಿಗಳು ನದಿಗೆ ಈಜಲು ಇಳಿದು ಈಜಲು ಸಾಧ್ಯವಾಗದೆ ಪರದಾಡುತ್ತಿದ್ದರು.
ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಕೊಳ್ಳೇಗಾಲ ಅಗ್ನಿಶಾಮಕ ಠಾಣಾಧಿಕಾರಿ ಅರುಣ್ ಕುಮಾರ್ ಅವರ ನೇತೃತ್ವದ ತಂಡವೊಂದು ಸ್ಥಳಕ್ಕೆ ಧಾವಿಸಿ, ಪ್ರಫುಲ್ಲಾ, ತುಷಾರಾ ಮತ್ತು ಪ್ರಮೋದ್ ಎಂಬ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ನಂದಕುಮಾರ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





