Mysore
24
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದ ನಾಗೇಂದ್ರ (21) ಪಾಲಾರ್ ಗ್ರಾಮದ ನದಿಯಾ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ.

ಘಟನೆಯ ವಿವರ
ಪಾಲಾರ್ ಗ್ರಾಮದ ಮಾದೇವರ ಪುತ್ರಿ ನದಿಯಾ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಐ.ಪಿ.ಹೆಚ್ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಈ ವಿಚಾರವನ್ನು ಐಪಿಹೆಚ್ ಸಂಸ್ಥೆಯವರು ಪೋಷಕರಿಗೆ ಮಾಹಿತಿ ನೀಡಲು ಪ್ರಯತ್ನಿಸಿದ್ದಾರೆ. ಆದರೆ ಪಾಲಾರ್ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಮಾಹಿತಿ ತಿಳಿಯುವುದು ತಡವಾಗಿದೆ.

ಪೊನ್ನಾಚಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕುಳ್ಳು ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ನಕ್ಕುಂದಿ ಗ್ರಾಮದ ನಾಗೇಂದ್ರ ಅವರ ತಾತ ಶಿವ ಮಾದಯ್ಯ ಅವರ ಮನೆಗೆ ಕರೆದುಕೊಂಡು ಬಂದಿದ್ದಾರೆ. ಮಂಗಳವಾರ ತಡರಾತ್ರಿ ಏಕಾಏಕಿ ಇಬ್ಬರು ಕೊಠಡಿಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಸಂಬಂಧ ಮೃತ ನದಿಯಾ ತಂದೆ ಮಾದೇವ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ವಶಕ್ಕೆ ಪಡೆದುಕೊಂಡು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪ್ರಮುಖ ಅಂಗಾಗಳನ್ನು ಪ್ರಯೋಗಾಲಯ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆ ಕೈಗೊಂಡಿರುವ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಚಾರಣೆ ನಡೆಸಿದ ನಂತರ ಸೂಕ್ತ ಕಾರಣ ತಿಳಿದು ಬರಲಿದೆ ಎಂದು ಮಹದೇಶ್ವರ ಬೆಟ್ಟ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:
error: Content is protected !!