ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಕುಡಿಯುವ ನೀರಿನ ಸಂಬಂಧ ಕರೆಯಲಾಗಿದ್ದ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.
ಹನೂರು ತಾಲ್ಲೂಕಿನ ಹುತ್ತೂರು, ಮಲೆ ಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ಕುರಟ್ಟಿ ಹೊಸೂರು, ಶೆಟ್ಟಳ್ಳಿ, ಕೌದಳ್ಳಿ, ಪಿ ಜಿ ಪಾಳ್ಯ, ಎಲ್ಲೇಮಾಳ ಅಜ್ಜೀಪುರ, ರಾಮಾಪುರ, ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಗ್ರಾಮಗಳ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ತಡವಾದರೂ ಕುಡಿಯುವ ನೀರಿಗೆ ಮೊದಲೇ ಆದ್ಯತೆ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ ರೀ ಬೋರ್ ಕೊರೆಸಿ ಸಮಸ್ಯೆಯನ್ನು ಬಗೆಹರಿಸಬೇಕು ಅಗತ್ಯವಿದ್ದರೆ ಮಾತ್ರ ಕೊಳವೆಬಾವಿಗಳನ್ನು ಕೊರೆಸಿ ನೀರು ಪೂರೈಕೆ ಮಾಡಬೇಕು ಎಂದರು.
ಕೊಳವೆಬಾವಿ ಕೊರೆಸಿ ನೀರು ಬಾರದಿದ್ದರೆ ಅಂತಹ ಗ್ರಾಮಗಳಲ್ಲಿ ಖಾಸಗಿ ಬೋರ್ ಗಳ ಮುಖಾಂತರ ನೀರು ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು. ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.
ಕೊಳವೆಬಾವಿ ಕೊರೆಸಿರುವ ಗ್ರಾಮ ಪಂಚಾಯಿತಿಗಳಲ್ಲಿ ಅನುದಾನವಿದ್ದರೆ ಅತಿ ಶೀಘ್ರದಲ್ಲಿಯೇ ಬೋರ್ವೆಲ್ ಲಾರಿ ಮಾಲೀಕರಿಗೆ ಅನುದಾನ ನೀಡಬೇಕು, ಒಂದೊಮ್ಮೆ ಅನುದಾನ ಇಲ್ಲದಿದ್ದರೆ ನನ್ನ ಗಮನಕ್ಕೆ ತಂದರೆ, ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.
ಇದೆ ವೇಳೆ ತಹಸಿಲ್ದಾರ್ ಚೈತ್ರ, ಇಒ ಉಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವ ನಾಗ್, ವ್ಯವಸ್ಥಾಪಕ ರಮೇಶ್, ಕಾರ್ಯಪಾಲಕ ಅಭಿಯಂತರ ಶಶಿಕುಮಾರ್, ಪಿಡಿಒಗಳಾದ ಸುರೇಶ್, ಕಿರಣ್, ರಾಮು, ರಾಜು, ಮಾದೇಶ್, ನಂಜುಂಡಸ್ವಾಮಿ, ಪುಷ್ಪಲತಾ, ಗಂಗಾಧರ್, ರಾಜೇಶ್, ಸಿದ್ದಪ್ಪ, ಡಾ ಶಿವಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.





