ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಮೃತಪಟ್ಟಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಿ ವ್ಯಾಪ್ತಿಯಲ್ಲಿ ಜರುಗಿದೆ.
ತಮಿಳುನಾಡಿನ ಮೇಟ್ಟೂರು ತಾಲೂಕಿನ ತೂಕನಪಟ್ಟಿ ಗ್ರಾಮದ ರಾಹುಲ್ (23) ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.
ಘಟನೆಯ ವಿವರ
ತಮಿಳುನಾಡಿನ ಮೇಟ್ಟೂರು ತಾಲೂಕಿನ ತೂಕನ ಪಟ್ಟಿ ಗ್ರಾಮದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ದರ್ಶನ ಮಾಡಿ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಮಿಳುನಾಡಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸರಕು ಸಾಗಣೆ ಮಾಡುತ್ತಿದ್ದ ಟೆಂಪೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಚಲಾಯಿಸುತ್ತಿದ್ದ ರಾಹುಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಸ್ನೇಹಿತ ತೊಟ್ಟಿಲ್ ಪಟ್ಟಿ ಗ್ರಾಮದ ಗಗನ್ (17)ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಗಾಯಗೊಂಡಿದ್ದ ಸವಾರರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ತಡವಾಗಿ ಬಂದಿದೆ. ಇದಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ವೈದ್ಯಾಧಿಕಾರಿಗಳು ಇಲ್ಲದೆ ಇರುವುದರಿಂದ ಗಾಯಗೊಂಡಿದ್ದ ಸವಾರರನ್ನು ತಮಿಳುನಾಡಿಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಆದರೆ ನಮಗೆ ತಮಿಳುನಾಡಿಗೆ ಹೋಗಲು ಯಾವುದೇ ಅನುಮತಿ ಇಲ್ಲ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ಬಿಟ್ಟುಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ ದಿಕ್ಕು ತೋಚದೆ ಸ್ಥಳೀಯರು ಖಾಸಗಿ ಆಂಬುಲೆನ್ಸ್ ಮೂಲಕ ಮೇಟ್ಟೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಅಪಘಾತ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





