ಹನೂರು: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನೋರ್ವನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಬಸವರಾಜು(50) ಎಂಬುವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಬುಧವಾರ ರಾತ್ರಿ ಒಡೆಯರಪಾಳ್ಯ ಗ್ರಾಮದ ಬಸವರಾಜು ಜಮೀನಿಗೆ ಕಾಡಾನೆ ಲಗ್ಗೆ ಇಟ್ಟು ಮನೆಯ ಮೇಲ್ಚಾವಣಿ ಹಾನಿಗೊಳಿಸಿ ಜೋಳದ ಫಸಲನ್ನು ಮೇಯುತ್ತಿತ್ತು, ಇದನ್ನು ಗಮನಿಸಿದ ರೈತ ಆ ಸ್ಥಳಕ್ಕೆ ತೆರಳಿ ಕಾಡಾನೆ ಓಡಿಸಲು ತೆರಳಿದಾಗ ಆತನ ಮೇಲೆ ಆನೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಪಾರಾಗಲು ಯತ್ನಿಸಿದ ವೇಳೆ ಬಲಗೈ ಪೆಟ್ಟಾಗಿದೆ. ಕುಟುಂಬಸ್ಥರು ಹನೂರಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸಗೆ ಆಗಮಿಸಿದಾಗ ಅದೇ ಮಾರ್ಗದಲ್ಲಿ ಮಹದೇಶ್ವರಬೆಟ್ಟದ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ತೆರಳುತ್ತಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆರವರು ಆತನ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಜಮಾಯಿಸಿದ ರೈತರು ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ನಿರಂತರವಾಗಿ ಕಾಡುಪ್ರಾಣಿಗಳ ಹಾವಳಿ ನಡೆಯುತ್ತಿದೆ, ಇದರಿಂದ ಬೆಳೆ ಹಾಗೂ ಸಾಕು ಪ್ರಾಣಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ತೊಂದರೆಯಾಗುತ್ತಿದೆ. ತಾವುಗಳು ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ವಹಿಸಬೇಕು. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾದಾಗ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಚಿವರು ಪ್ರತಿಕ್ರಿಯಿಸಿ ಈ ಭಾಗದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.





