ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಅತಿ ಶೀಘ್ರದಲ್ಲಿ ಮುಖ್ಯಮಂತ್ರಿಗಳನ್ನು ಕರೆತಂದು ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷ ಕೆ ವೆಂಕಟೇಶ್ ತಿಳಿಸಿದರು.

ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತಿರುಪತಿ ಮಾದರಿಯಲ್ಲಿ ಕ್ಯೂಲೈನ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನೂ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕ್ಯೂ ಲೈನ್ ನಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಿರುವುದರಿಂದ 90 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ದಾಸೋಹ ಭವನ ನಿರ್ಮಾಣ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದ್ದು, ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯ ವಸ್ತುಗಳನ್ನು ಯಾವ ರೀತಿ ಮರುಬಳಕೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಖಾಸಗಿ ಏಜೆನ್ಸಿ ಮುಖಾಂತರ ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಸಮಗ್ರ ಯೋಜನೆ ರೂಪಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಕಳೆದ ವರ್ಷ ಸಚಿವ ಸಂಪುಟ ಸಭೆ ನಡೆದ ಸಂದರ್ಭದಲ್ಲಿ ವಜ್ರಮಲೆ ವಸತಿಗೃಹವನ್ನು ಉದ್ಘಾಟನೆ ಮಾಡಲಾಗಿತ್ತು. ಇದೀಗ ಪೀಠೋಪಕರಣಗಳನ್ನು ಅಳವಡಿಸುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳಿಗೆ ವಾಸ್ತವ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಒಟ್ಟಾರೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಕಳಪೆ ಕಾಮಗಾರಿ ಕಂಡು ಬಂದರೆ ಅಂತಹ ಗುತ್ತಿಗೆದಾರರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದರು.

ಒಳ ಚರಂಡಿಯ ನೀರು ಅಂತರಗಂಗೆ ಸೇರಿ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಾತನಾಡಿ, ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಯಾಣಿ ನಿರ್ಮಾಣ ಮಾಡಿ ಪೈಪ್ ಗಳ ಮೂಲಕ ಶುದ್ಧ ನೀರು ಬಿಡಲಾಗುತ್ತಿದೆ. ಆದರೂ ಕೆಲವು ಭಕ್ತಾದಿಗಳು ಅಂತರಗಂಗೆಯಲ್ಲಿ ಸಂಪ್ರದಾಯದಂತೆ ಸ್ನಾನ ಮಾಡುತ್ತಿದ್ದಾರೆ. ಈಗಾಗಲೇ ಮೈ ಕ್ಯಾಪ್ಸ್ ಸಂಸ್ಥೆಯವರು ಸಿಎಸ್ಆರ್ ಅನುದಾನದಲ್ಲಿ ಎರಡು ಕೋಟಿ ಅನುದಾನ ನೀಡುತ್ತಿದ್ದಾರೆ. ಈ ಅನುದಾನ ಸದ್ಬಳಕೆ ಮಾಡಿಕೊಂಡು ಅಂತರಗಂಗೆಯನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗಿ ಘೋಷಣೆಯಾಗಿದ್ದರೂ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುತ್ತಿಲ್ಲ ಎಂಬುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಮಲೆ ಮಾದೇಶ್ವರ ಬೆಟ್ಟಕ್ಕೆ ರಾಜ್ಯ ಸೇರಿದಂತೆ ನೆರೆ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಈಗಾಗಲೇ ಪ್ರಾಧಿಕಾರದ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಧಿಸಲಾಗುವುದು ಎಂದರು.

ಶಿವರಾತ್ರಿ ಜಾತ್ರಾ ಮಹೋತ್ಸವ ಮುಗಿದರೂ ಅರಣ್ಯ ಪ್ರದೇಶದ ಇಕ್ಕಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಮಾಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಾರ್ಯದರ್ಶಿ ರಘು ಅವರು, ತಾಳು ಬೆಟ್ಟದಿಂದ ಮಲೆ ಮಾದೇಶ್ವರ ಬೆಟ್ಟದವರೆಗೆ ಈಗಾಗಲೇ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛತೆ ಮಾಡಲಾಗಿದೆ. ತಾಳು ಬೆಟ್ಟದಿಂದ ಕೌದಳ್ಳಿಯವರೆಗೂ ಪ್ಲಾಸ್ಟಿಕ್ ಸಂಗ್ರಹಣೆಯನ್ನು ಪ್ರಾಧಿಕಾರದ ವತಿಯಿಂದಲೇ ಸಂಗ್ರಹಣೆ ಮಾಡಲಾಗುವುದು ಎಂದು ತಿಳಿಸಿದರು.

ಕ್ಯೂ ಲೈನ್‌ನಲ್ಲಿ ಅಗತ್ಯ ಸೌಲಭ್ಯ: ಭಕ್ತಾದಿಗಳು ದೇವರ ದರ್ಶನ ಪಡೆಯಲು ಪ್ರಸ್ತುತ ನಿರ್ಮಾಣವಾಗುತ್ತಿರುವ ಸರತಿ ಸಾಲಿನ ಸಂಕೀರ್ಣದಿಂದ ದೇಗುಲದ ಆಲಂಬಾಡಿ ದ್ವಾರದವರೆಗೆ ಆರು ಮೀಟರ್ ಸುರಂಗ ಮಾರ್ಗ ಹಾಗೂ ಮೆಟ್ಟಿಲುಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಈ ಮಾರ್ಗದಲ್ಲಿ ಗಣಕಿ ಕೃತ ಎಲ್‌ಇಡಿ ಪರದೆಯ ಮೇಲೆ ಉಪಯುಕ್ತ ಮಾಹಿತಿ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ. ನೆಲ ಮಹಡಿ ಹಾಗೂ ಮೊದಲ ಅಂತಸ್ತಿನಲ್ಲಿ ಒಂದು ಬ್ಲಾಕ್ ನಲ್ಲಿ 500 ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು ಎಂಟು ಬ್ಲಾಕ್ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ಬ್ಲಾಕ್‌ನಲ್ಲಿಯೂ ಮಹಿಳೆಯರು ಪುರುಷರು, ಅಂಗವಿಕಲರಿಗೆ ಪ್ರತ್ಯೇಕ ಶೌಚಗೃಹ, ಶುದ್ಧ ಕುಡಿಯುವ ನೀರು, ಫ್ಯಾನ್ ಒದಗಿಸುವ ಉದ್ದೇಶವನ್ನು ಹೊಂದಲಾಗಿದೆ. ಹಾಗಾಗಿ ಈ ಯೋಜನೆ ಪೂರ್ಣಗೊಂಡರೆ ಶ್ರೀ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳು ಯಾವುದೇ ತೊಂದರೆ ಇಲ್ಲದೆ ದೇವರ ದರ್ಶನ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿದು ಬಂದಿದೆ.

ಕಾಮಗಾರಿ ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಶ್ರೀರೂಪಾ, ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು , ಉಪ ಕಾರ್ಯದರ್ಶಿ ಚಂದ್ರಶೇಖರ್, ಎಇಇ ಚಿನ್ನಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

54 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

1 hour ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

6 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago