Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಿಎಂ ಭೇಟಿ ಹಿನ್ನೆಲೆ ಅಧಿಕಾರಿಗಳ ಜೊತೆ ಸಚಿವ ವಿ. ಸೋಮಣ್ಣ ಸಭೆ

ಹನೂರು: ಅಧಿಕಾರಿಗಳು ಅಗತ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳುವುದರ ಮೂಲಕ ಡಿ.12 ರಂದು ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಯಶಸ್ವಿಯಾಗಬೇಕು. ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಮುಖ್ಯಮಂತ್ರಿ ಆಗಮಿಸುವ ಹಿನ್ನಲೆ ಮ.ಬೆಟ್ಟದ ನಾಗಮಲೆ ಭವನದಲ್ಲಿ ಆಯೋಜಿಸಿದ್ಧ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.12 ರಂದು ಹನೂರು ಕ್ಷೇತ್ರಕ್ಕೆ ಆಗಮಿಸಿಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದ್ದರಿಂದ ಇಲಾಖೆಯ ಅಧಿಕಾರಿಗಳು ಪಟ್ಟಿಯನ್ನು ಸಿದ್ದಪಡಿಸಿಕೊಂಡು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಹಾಗೆಯೇ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಇದರ ಜತೆಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಅಗತ್ಯ ಕ್ರಮವಹಿಸಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯನ್ನು ವಹಿಸಿಕೊಳ್ಳುವುದರ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಬೇಕು ಎಂದು ತಿಳಿಸಿದರು.

ರಸ್ತೆ ದುರಸ್ತಿಪಡಿಸಿ; ಸತ್ತೇಗಾಲ – ಧನಗೆರೆ, ಹನೂರಿನಿಂದ ಮ.ಬೆಟ್ಟ ಹಾಗೂ ಸಾಲೂರು ಮಠಕ್ಕೆ ತೆರಳುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಅಧ್ವಾನಗೊಂಡಿದೆ. ಇದರಿಂದ ಸಾರ್ವಜನಿಕರು ಸಂಚರಿಸಲು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಅಗತ್ಯ ಕ್ರಮವಹಿಸಿ ದುರಸ್ತಿಪಡಿಸಬೇಕು. ಜತೆಗೆ ಮ.ಬೆಟ್ಟದ ಹೆಲಿಪ್ಯಾಡ್ ರಸ್ತೆಯನ್ನು ಸಹ ಸರಿಪಡಿಸಬೇಕು ಎಂದು ಪಿಡಬ್ಯುಡಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇನ್ನು ಮ.ಬೆಟ್ಟದಲ್ಲಿ ಮುಡಿಸೇವೆ ನೀಡುವ ಸ್ಥಳ ಅನೈರ್ಮಲ್ಯದಿಂದ ಕೂಡಿದೆ. ಹಾಗಾಗಿ ಸ್ವಚ್ಛತೆ ಕಾಪಾಡಬೇಕು. ಈ ದಿಸೆಯಲ್ಲಿ ಪೌರ ಕಾರ್ಮಿಕರ ಸಭೆ ಕರೆದು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಆಗಮಿಸುವ ಭಕ್ತರಿಗೆ ಉತ್ತಮ ಸೇವೆ ಒದಗಿಸಬೆಕು ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಇದರ ಜೊತೆಗೆ ತಾಳುಬೆಟ್ಟದಲ್ಲಿನ ವಾಣಿಜ್ಯ ಮಳಿಗೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದರು.

ಇದೇ ವೇಳೆ ಶಾಸಕ ಆರ್.ನರೇಂದ್ರ ಮಾತನಾಡಿ, ತಾಲೂಕು ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುವ ಉದ್ಧೇಶದಿಂದ ಜಲ ಜೀವನ್ ಮಿಷನ್ ಅನುಷ್ಠಾನಗೊಂಡಿದೆ. ಹಾಗಾಗಿ ಸಿಸಿ ರಸ್ತೆಯನ್ನು ಅಗೆದು ಪೈಪ್‍ಲೈನ್ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಆದರೆ ಜವಾಬ್ದಾರಿ ಹೊತ್ತವರು ಸರಿಯಾಗಿ ಸಿಮೆಂಟ್‍ನಿಂದ ತೇಪೆ ಹಾಕುತ್ತಿಲ್ಲ. ಇದರಿಂದ ರಸ್ತೆಯು ಹಾಳಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಈ ಬಗ್ಗೆ ಗಮನಹರಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಶಾಸಕ ಅರ್.ನರೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್, ಜಿಪಂ ಸಿಇಒ ಕೆ.ಎಂ ಗಾಯತ್ರಿ, ಎಸ್ಪಿ ಶಿವಕುಮಾರ್, ಡಿವೈಎಸ್ಪಿ ನಾಗರಾಜು, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಡಿಎಚ್‍ಒ ಡಾ.ವಿಶ್ವೇಶ್ವರಯ್ಯ, ತಹಸೀಲ್ದಾರ್ ಆನಂದಯ್ಯ, ತಾಪಂ ಇಒ ಶ್ರೀನಿವಾಸ್, ಪಪಂ ಮುಖ್ಯಾಧಿಕಾರಿ ಮೂರ್ತಿ ಇನ್ನಿತರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ