ಜಿಲ್ಲಾ ಪಂಚಾಯಿತಿ ಮುಂಭಾಗ ಕರ್ನಾಟಕ ವೀರ ಕೇಸರಿ ಪಡೆಯಿಂದ ಪ್ರತಿಭಟನೆ
ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ವೀರ ಕೇಸರಿ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಜವಾವಣೆಗೊಂಡ ಪ್ರತಿಭಟನಾಕಾರರು, ಪಂಚಾುಂತ್ ರಾಜ್ ಇಂಜಿನಿಯರಿಂಗ್ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ತುಂಡು ಗುತ್ತಿಗೆಯನ್ನು ಅಧಿಕಾರಿಗಳು ತಮಗಿಷ್ಟ ಬಂದವರಿಗೆ ನೀಡಿ ಅಕ್ರಮ ಎಸಗಿದ್ದಾರೆ. ಸರ್ಕಾರಿ ನಿಯಮದಂತೆ ತುಂಡು ಗುತ್ತಿಗೆ ಕಾಮಗಾರಿ ಕೋರಿ ಅರ್ಜಿ ಸಲ್ಲಿಸಿರುವ ಗುತ್ತಿಗೆದಾರರಿಗೆ ಜ್ಯೇಷ್ಠತೆ ಅನ್ವಯ ಕಾಮಗಾರಿ ನೀಡಬೇಕು. ಗುತ್ತಿಗೆದಾರರು ಅರ್ಜಿ ಸಲ್ಲಿಸಿರುವ ವಿವರವನ್ನು ಸ್ವೀಕೃತಿ ವಹಿ ಪುಸ್ತಕದಲ್ಲಿ ನಮೂದು ಮಾಡಬೇಕು. ಆದರೆ, ಅಧಿಕಾರಿಗಳು ಅರ್ಜಿ ಸಲ್ಲಿಸದ ಗುತ್ತಿಗೆದಾರರಿಗೆ ಕಾಮಗಾರಿ ನೀಡಿ ಅರ್ಹರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮದ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುತ್ತಿಲ್ಲ. ಕೂಡಲೇ ಸರ್ಕಾರ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಮಧುವನ ಚಂದ್ರು, ಕಾರ್ಯದರ್ಶಿ ಮಹದೇವು, ಗೌರವ ಸಲಹೆಗಾರ ಆಲಗೂಡು ಬಸವರಾಜು, ಗುತ್ತಿಗೆದಾರರಾದ ಶಾಲಾಕ್ಷ, ದೇವರಾಜು, ಪ್ರವೀಣ್, ಮರಿಸ್ವಾಮಿ, ರತ್ನಮ್ಮ, ಕನಕಮ್ಮ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





