ಹನೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ದಸರಾ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಹನೂರಿನಲ್ಲಿಯೂ ಕೂಡ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಗ್ರಾಮೀಣ ದಸರಾ ಆಚರಣೆ ಸಂಬಂಧ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ತಾಲ್ಲೂಕು ಕೇಂದ್ರದಲ್ಲಿ ದಸರಾ ಆಚರಣೆ ನಡೆಸಲು ಕಾಲಾವಕಾಶ ಕಡಿಮೆ ಇದ್ದು, ಎರಡು ದಿನಗಳ ಆಚರಣೆ ಬದಲು ಒಂದೇ ದಿನ ಸ್ಥಳೀಯ ಕಲಾವಿದರು ಸೇರಿದಂತೆ ಪ್ರಖ್ಯಾತ ಹಾಸ್ಯ ಹಾಗೂ ಗಾಯನ ತಂಡಗಳು ಒಳಗೊಂಡಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಿರುತೆರೆ ಪ್ರಖ್ಯಾತ ಹಾಸ್ಯ ತಂಡವಾದ ಗಿಚ್ಚಿ ಗಿಲಿ ಗಿಲಿ ತಂಡದವರು ಜನರನ್ನು ಮನರಂಜಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಆಯಾ ಇಲಾಖೆಯ ವಿಶೇಷ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಫ್ಲೆಕ್ಸ್ ಬ್ಯಾನರ್ ಅಳವಡಿಸುವುದು, ಸೆಸ್ಕ್ ವತಿಯಿಂದ ಖಾಸಗಿ ಹಾಗೂ ಸರ್ಕಾರಿ ಕಟ್ಟಡಗಳ ವಿದ್ಯುತ್ ದೀಪಾಲಂಕಾರಗಳನ್ನು ಕೈಗೊಳ್ಳುವುದು, ಸ್ಥಳೀಯ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ ರಂಗೋಲಿ ಸ್ಪರ್ಧೆ ವಿವಿಧ ಆಟೋಟಗಳನ್ನು ಆಯೋಜಿಸಿ ಬಹುಮಾನವನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಆನಂದಯ್ಯ ಪ.ಪಂ.ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್ ಕುಮಾರ್, ಸಂಪತ್ ಕುಮಾರ್,ಇಒ ಶ್ರೀನಿವಾಸ್, ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್,ಪಪಂ ಮುಖ್ಯಾಧಿಕಾರಿ ಪರಶಿವಯ್ಯ, ಎಇಇ ಶಂಕರ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಕೃಷಿ ಇಲಾಖೆಯ ಸುಂದರಮ್ಮ,ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಬಾಲಸುಬ್ರಹ್ಮಣ್ಯ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು : ಶಾಸಕ ಆರ್. ನರೇಂದ್ರ





