ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳ, ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ ಮತ್ತು ನೇರ ಸಂಬಳ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ.15 ರಂದು ಬೆಂಗಳೂರು ಚಲೋ ನಡೆಸಲಿದ್ದು, ಫ್ರೀಡಂಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಲೋಡಿಂಗ್ ಅಂಡ್ ಅನ್ ಲೋಡಿಂಗ್ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವರದರಾಜೇಂದ್ರ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ರಾಜ್ಯಾದ್ಯಂತ ಪ್ರಾಣದ ಹಂಗು ತೊರೆದು ಶ್ರಮಿಸಿದ ವರ್ಗ ನಮ್ಮದು. ಅಂಗನವಾಡಿ ಕಾರ್ಯಕರ್ತೆಯರನ್ನು ಗುರುತಿಸುವ ಸರ್ಕಾರಕ್ಕೆ ನಾವು ಕಾಣಿಸುತ್ತಿಲ್ಲ. 2018ರ ನಂತರದಿಂದ ಲೋಡಿಂಗ್, ಅನ್ಲೋಡಿಂಗ್ ಕೂಲಿ ದರವನ್ನು ಹೆಚ್ಚಿಸಿಲ್ಲ. ಎಲ್ಲಾ ವಸ್ತುಗಳ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದ್ದು, ಬೆಲೆಯೇರಿಕೆಗನುಗುಣವಾಗಿ ಕೂಲಿ ಹೆಚ್ಚಳ ಮಾಡಬೇಕು, ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ ಮತ್ತು ನೇರ ಸಂಬಳ ಪಾವತಿ ಸೇರಿದಂತೆ ವಿವಿಧ ಬೇಡಿಕೆಗೆ ಅಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುವುದು ಎಂದರು.
ಉಪಾಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾಧ್ಯಕ್ಷ ಕರಿನಾಯಕ, ಪದಾಧಿಕಾರಿ ಕೃಷ್ಣಪ್ಪ, ಜಿಲ್ಲಾ ಕಾರ್ಯದರ್ಶಿ ಜಿ.ಮಹದೇವ ಇದ್ದರು.





