ಚನ್ನರಾಯಪಟ್ಟಣ : ಕೇಂದ್ರದಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಮಂಜೂರಾತಿ ದೊರಕಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಆದರೆ, ಒಂದು ವರ್ಷವಾದರೂ ಯೋಜನೆಗೆ ಒಪ್ಪಿಗೆ ಕೊಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಟೀಕಿಸಿದರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಭಾನುವಾರ ಯುವ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಯುವಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಿಂದ ಬಿಜೆಪಿ ಮತ್ತು ಜೆಡಿಎಸ್ನಿಂದ 19 ಸಂಸದರು ಆಯ್ಕೆಯಾಗಿದ್ದಾರೆ. ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಬಿಜೆಪಿ, ಜೆಡಿಎಸ್ ಸಂಸದರು ಧ್ವನಿಎತ್ತುತ್ತಿಲ್ಲ ಎಂದು ಆಪಾದಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ರೂ . 5.300 ಕೋಟಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೆ ಬಿಡಿಗಾಸನ್ನೂ ಬಿಡುಗಡೆಮಾಡಿಲ್ಲ. ಇದನ್ನು ಬಿಜೆಪಿ, ಜೆಡಿಎಸ್ ಸಂಸದರು ಪ್ರಶ್ನಿಸುತ್ತಿಲ್ಲ ಎಂದು ಆಪಾದಿಸಿದರು.
ಐಟಿ, ಇಡಿ ದಾಳಿ ಬೆದರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕದ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತುವುದರಿಂದ ಇವರ ವಿರುದ್ಧ ಕೇಂದ್ರ ಸರ್ಕಾರ ಇ.ಡಿ, ಸಿಬಿಐ, ಐ.ಟಿ ದಾಳಿ ಮಾಡಿಸುತ್ತದೆ. ಕರ್ನಾಟಕಕ್ಕೆ ತೆರಿಗೆ ಪಾಲನ್ನು ಸಮರ್ಪಕವಾಗಿ ನೀಡದೇ ತಾರತಮ್ಯ ಎಸಗಲಾಗುತ್ತಿದೆ. ಬಿಹಾರ, ಉತ್ತರಪ್ರದೇಶಕ್ಕೆ ಹೆಚ್ಚು ಪ್ರಮಾಣದಲ್ಲಿ ತೆರಿಗೆಯ ಪಾಲನ್ನು ನೀಡಲಾಗುತ್ತಿದೆ. ಕನ್ನಡ ಭಾಷೆಯನ್ನು ನೇಪಥ್ಯಕ್ಕೆ ಸರಿಸಿ, ಹಿಂದಿ ಭಾಷೆ ಹೇರಲು ಹೊರಟಿದೆ. ಇದನ್ನು ಪ್ರಶ್ನಿಸದ ಜೆಡಿಎಸ್ ಪಕ್ಷ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ. ಗುಲಾಮಗಿರಿ ಮಾಡುತ್ತಿದೆ ಎಂದು ದೂರಿದರು.
ಸಂಸದ ಶ್ರೇಯಸ್ ಎಂ. ಪಟೇಲ್, ಬೆಂಗಳೂರು ಶಿವಾಜಿ ನಗರದ ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ಗೌಡ, ಕಾಂಗ್ರೆಸ್ ಮುಖಂಡರಾದ ಸಿ.ಎಸ್. ಪುಟ್ಟೇಗೌಡ, ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳಾದ ದಿವ್ಯಾ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಾಂಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಮಂಜೇಗೌಡ, ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್. ಮೂರ್ತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.





