ಹಾಸನ : ಬೆಂಗಳೂರು ಮಂಗಳೂರು ಹೆದ್ದಾರಿ ಗುಡ್ಡಕುಸಿತಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಪರಿಶೀಲನೆ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಕಳೆದ ಐದಾರು ದಿನಗಳಿಂದ ದೊಡ್ಡಮಟ್ಟದಲ್ಲಿ ಮಳೆ ಆರಂಭವಾಗಿದೆ. ೨೦೧೮ರಲ್ಲಿ ನಾನು ಸಿಎಂ ಆಗಿದ್ದಾಗ ಇದೇ ರೀತಿ ಮಳೆಯಾಗಿತ್ತು. ೨೦೧೮ ರ ನಂತರ ಈಗ ಈ ರೀತಿ ಮಳೆಯಾಗಿದೆ. ಒಂದೆಡೆ ಜಲಾಶಯಗಳು ತುಂಬಿದ್ದು, ಪಕ್ಕದ ರಾಜ್ಯಗಳ ಜತೆ ಸಂಘರ್ಷಕ್ಕೆ ಒಂದು ವರ್ಷ ವಿರಾಮ ಸಿಕ್ಕಿದೆ. ಮಳೆಯಿಂದ ಆಗಿರುವ ಅನಾಹುತಗಳು, ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಶಿರೂರಿನಲ್ಲಿ ಮಳೆ ಮುಂದುವರೆದರೆ ಇನ್ನೂ ಭೂ ಕುಸಿತವಾಗುತ್ತದೆ. ಸಕಲೇಶಪುರದಿಂದ ಉದ್ದಕ್ಕೂ ಭೂಕುಸಿತವಾಗುತ್ತಲೇ ಇದೆ. ಕೇಂದ್ರದ ಭೂ ಸಾರಿಗೆ ಸಚಿವರಿಗೆ ಎಲ್ಲಾ ಮಾಹಿತಿ ಕೊಡುತ್ತೇನೆ. ವೈಜ್ಷಾನಿಕ ಕಾಮಗಾರಿ ಮಾಡಲಿ ಗಡ್ಕರಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಸ್ಥಳಕ್ಕೆ ಒಮ್ಮೆ ಮನವಿ ನೀಡಲು ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರ ಮಂತ್ರಿಗಳು ಭೇಟಿ ನೀಡಿ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು, ಹಾಗಾಗಿ ನಾನು ನಿನ್ನೆಯಿಂದ ಭೇಟಿ ನೀಡುತ್ತಿದ್ದೇನೆ ಎಂದರು.
ಈ ವೇಳೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಶಾಸಕರುಗಳಾದ ಸಿಮೆಂಟ್ ಮಂಜು, ಎಚ್.ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ , ಎಚ್ ಕೆ ಸುರೇಶ್ ಸಾಥ್ ನೀಡಿದರು. ಅಲ್ಲದೆ ಜಿಲ್ಲಾಧಿಕಾರಿ ಸತ್ಯಭಾಮ ಎಸ್ಪಿ ಮಹಮದ್ ಸುಜೇತಾ, ಎಸಿ ಶೃತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.





