ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಜಯಂತಿ ಹಾಗೂ ಭರತ್ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲ್ಲೂಕಿನ ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದನು.
ಪದೇ ಪದೇ ಅತ್ತೆ-ಸೊಸೆ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತು ಭರತ್ ಪತ್ನಿ ಮನೆಬಿಟ್ಟು ತವರು ಮನೆ ಸೇರಿದ್ದಳು.
ಎರಡು ಮೂರು ಬಾರಿ ರಾಜಿ ಪಂಚಾಯಿತಿ ಮಾಡಿದ್ದರೂ ಏನೂ ಪ್ರಯೋಜನವಾಗಲಿಲ್ಲ. ಇದರಿಂದ ಮನನೊಂದಿದ್ದ ಭರತ್ ಹಾಗೂ ಜಯಂತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





