Mysore
22
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಹಾಸನದ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ: ಅರಣ್ಯ ಇಲಾಖೆ ಆದೇಶ

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಸ್ಥಳೀಯರು ಹಾಗೂ ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ. ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿ.ಮೀ ದೂರದಲ್ಲಿದೆ.

ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಸುಬ್ರಹ್ಮಣ್ಯದ ಪ್ರವಾಸಿಗರೊಬ್ಬರಿಗೆ ಸ್ವಂತ ವಾಹನದಲ್ಲಿ ಗಿರಿಧಾಮಕ್ಕೆ ಭೇಟಿ ನೀಡಿದ್ದಕ್ಕೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಯಸಳೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಗ್ರಾಮಸ್ಥರು ಹೇಳುವ ಪ್ರಕಾರ, ಪಟ್ಲ ಬೆಟ್ಟ ಪ್ರದೇಶದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯ ವಾಹನಗಳ ಚಾಲಕರ ನಡುವೆ ಜಗಳ ಸಾಮಾನ್ಯವಾಗಿದೆ. ಆದರೆ, ಜನರು ಸ್ಥಳೀಯರಿಗೆ ಹೆದರಿ ದೂರು ದಾಖಲಿಸಲು ಹಿಂದೆ ಸರಿಯುವುದರಿಂದ ಇದು ಈವರೆಗೆ ಗಮನಕ್ಕೆ ಬಂದಿಲ್ಲ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ. ಏತನ್ಮಧ್ಯೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಘಟನೆಯ ಬಗ್ಗೆ ಡಿಸಿಎಫ್‌ನಿಂದ ವಿವರವಾದ ವರದಿಯನ್ನು ಕೇಳಿದ್ದಾರೆ.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಲ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದ್ದಾರೆ. ಹೀಗಾಗಿ ಈ ಪ್ರಕ್ರಿಯೆಯ ನಂತರ ಪ್ರವಾಸಿಗರಿಗೆ ಬೆಟ್ಟಕ್ಕೆ ಅವಕಾಶ ದೊರೆಯುವ ಸಾಧ್ಯತೆಯಿದೆ.

Tags:
error: Content is protected !!