ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ ರಮೇಶ್ (62)) ಸಾವಿಗೀಡಾದವರು.
ಶನಿವಾರ ರಾತ್ರಿ ಜಮೀನಿನ ಕೆಲಸ ಮುಗಿಸಿಕೊಂಡು ಅಂಗಡಿಯಲ್ಲಿ ದಿನಸಿ ಪದಾರ್ಥ ತೆಗೆದುಕೊಂಡು ಹಂಪಾಪುರಕ್ಕೆ ಹೋಗುವ ಸಂದರ್ಭದಲ್ಲಿ ಹೊಮ್ಮರಗಳ್ಳಿ ಸರ್ಕಾರಿ ಶಾಲೆ ಮುಖ್ಯರಸ್ತೆಯ ಬದಿಯಲ್ಲಿ ಹೆಚ್.ಡಿ.ಕೋಟೆ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಕೂಡಲೇ ಚಾಲಕ ಬಸ್ಸನ್ನು ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದು ಪೊಲೀಸರು ವಿಚಾರಣೆಯನ್ನು ನಡೆಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದ್ದು, ಡಿಪೋಮ್ಯಾನೇಜರ್ ತ್ಯಾಗರಾಜು ಸ್ಥಳಕ್ಕೆ ಭೇಟಿ ನೀಡಿ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.





