ಚಾಮರಾಜನಗರ: ಸರ್ವರನ್ನೂ ಒಳಗೊಂಡಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ರಾಜ್ಯ ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಚಾ.ನಗರ ಸಹಾ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಜಿಲ್ಲಾಡಳಿತ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಸನ್ಮಾನಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ರಾಜ್ಯದ ಗಡಿಜಿಲ್ಲೆಗಳಲ್ಲಿ ಒಂದಾದ ಚಾ.ನಗರ ಪ್ರತ್ಯೇಕ ಜಿಲ್ಲೆಯಾಗಿ ೨೫ ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ
ಜಿಲ್ಲೆಯ ಸಮಗ್ರವಾದ ಅಭಿವೃದ್ಧಿ ಅಭಿವೃದ್ಧಿ ಪಥದತ್ತಾ ಕೊಂಡೊಯ್ಯಲು ಸರ್ಕಾರ ತೀರ್ಮಾನಿಸಿದೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಗೋಶಾಲೆ, ಘನತ್ಯಾಜ್ಯ ನಿರ್ವಹಣಾ ಘಟಕ, ಪೌರಕಾರ್ಮಿಕರ ಗೃಹ ನಿರ್ಮಾಣ, ಪಶುಸಂಗೋಪನಾ ಕಾಲೇಜು, ನಗರೋತ್ಥಾನ ೩ನೇ ಹಂತದ ಯೋಜನೆಯಡಿ ೬೧ ಕೋಟಿ ಮೊತ್ತದ ೭೨ ಕಾಮಗಾರಿ ಅನುಮೋದನೆ, ವಿವಿಧ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ೧೧೧ ಕೋಟಿ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ವಿದ್ಯಾರ್ಥಿಗಳಿಗೆ ೫ ಕೋಟಿ ರೂ ಪ್ರೋತ್ಸಾಹ ಧನ, ಕೊಳ್ಳೇಗಾಲದಲ್ಲಿ ೮ ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ ನಿರ್ಮಾಣ. ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳಿಂದ ೭೦ ಸಾವಿರ ಉದ್ಯೋಗ ಸೃಷ್ಟಿ, ಜಲಶಕ್ತಿ ಯೋಜನೆಯಡಿ ೨೬೦ ಕೆರೆಗಳ ಅಭಿವೃದ್ಧಿ, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ೧.೯೫ ಲಕ್ಷ ಶೌಚಾಲಯ ನಿರ್ಮಾಣ, ಜಲಜೀವನ್ ಮಿಷನ್ ಯೋಜನೆಯಡಿ ೧.೧೮ ಲಕ್ಷ ಮನೆಗಳ ನಿರ್ಮಾಣ, ಹಾಗೂ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ೧೧೬ ಕೋಟಿ ಮಂಜೂರಾಗಿದ್ದು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ ಎಂದರು.
ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಜಿಲ್ಲೆಯ ೩೧ ಗ್ರಾ.ಪಂ ಆಯ್ಕೆಗೊಂಡಿದ್ದು ಸಮಗ್ರ ಅಭಿವೃದ್ಧಿಪಡಿಸಲಾಗುವುದು, ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವರನಟ ಡಾ.ರಾಜ್ ಕುಮಾರ್ ರಂಗಮಂದಿರ ಈ ಸಂದರ್ಭದಲ್ಲಿ ಉದ್ಘಾಟನೆಗೊಳ್ಳಲಿದೆ. ಇಂತಹ ಜನಪರ ಯೋಜನೆ ಹಾಗೂ ಸಾಧನೆಗಳನ್ನು ಸ್ಮರಿಸಿಕೊಳ್ಳುವುದರ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ತತ್ವದಂತೆ, ಪ್ರಜಾಸತ್ತಾತ್ಮಕ ರಾಷ್ಟ್ರದ ಪರಿಕಲ್ಪನೆಯನ್ನು ಸಕಾರಗೊಳಿಸೋಣ ಎಂದು ತಿಳಿಸಿದರು.