ಮೈಸೂರು: ನಗರದ ಜೆಎಎಸ್ ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗಕ್ಕೆ ಸಮೀಪದಲ್ಲಿಯೇ ಮತ್ತೊಂದು ಮೊಸಳೆ ಮತ್ತೆ ಕಾಣಿಸಿಕೊಂಡಿದೆ. ಸ್ಥಳೀಯರ ಪ್ರಕಾರ ಭಾನುವಾರ ಕಾಣಿಸಿಕೊಂಡ ಮೊಸಳೆಗಿಂತ ಇದು ಆಕಾರದಲ್ಲಿ ಭಿನ್ನವಾಗಿದ್ದು ಈ ಮೊಸಳೆಯೇ ಬೇರೆ ಎಂದು ಹೇಳುತ್ತಾರೆ.
ಸೋಮವಾರ ಮಧ್ಯಾಹ್ನದ ವೇಳೆಯಲ್ಲಿ ಮೊಸಳೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ನೋಡುತ್ತಿರುವಾಗಲೇ ಚರಂಡಿ ನೀರಿಗೆ ಹಾರಿ ಮಾಯವಾಗಿದೆ. ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು. ಮೋಟಾರ್ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.
ಸೋಮವಾರ ಈ ಕೆರೆಗೆ ಸಮೀಪದಲ್ಲಿಯೇ ಚರಂಡಿ ನೀರಿನಿಂದ ಮೇಲೆ ಬಂದ ಮೊಸಳೆ ಬಹು ಹೊತ್ತಿನವೆರೆಗೂ ಮುರಿದು ಬಿದ್ದ ತೆಂಗಿನ ಮರವೊಂದರ ಮೇಲೆ ಮಲಗಿತ್ತು. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ ಮೊಸಳೆ ಮತ್ತೆ ಚರಂಡಿ ನೀರು ಸೇರಿಕೊಂಡಿತ್ತು. ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ನಾವು ಹಲವು ಬಾರಿ ಈ ಮೊಸಳೆಗಳನ್ನು ನೋಡಿದ್ದೇವೆ ಎಂದು ರಾಮಾನುಜ ರಸ್ತೆ ನಿವಾಸಿ ಮಧುಕರ್, ಎಲೆ ತೋಟದಲ್ಲಿಅಡಿಕೆ ತೋಟ ಹೊಂದಿರುವ ಮರಿಸ್ವಾಮಿ ಮತ್ತು ಚಾಮರಾಜು ನಿವಾಸಿ ಆಂದೋಲನಕ್ಕೆ ತಿಳಿಸಿದರು.
ಕಳೆದ ಒಂದು ತಿಂಗಳಲ್ಲಿ ಹಲವು ಬಾರಿ ಮೊಸಳೆ ಕಾಣಿಸಿಕೊಂಡಿದ್ದು ಸ್ಥಳೀಯರನ್ನು ಆತಂಕಕ್ಕೆ ತಳ್ಳಿದೆ. ಇಲ್ಲಿನ ಅಡಿಕೆ ತೋಟದ ಮಧ್ಯೆ ವೀಳ್ಯದೆಲೆ ಬೆಳೆಯುವ ಜನರು ಈಗ ತೋಟಕ್ಕೆ ಹೋಗಲು ಹೆದರುತ್ತಿದ್ದಾರೆ. ಮೊಸಳೆ ಆಗಾಗ ಇಲ್ಲಿನ ಸಣ್ಣ ಸೇತುವೆ ಮೇಲೆ ಬಂದು ಮಲಗಿರುತ್ತದೆ, ಮನುಷ್ಯರ ಹೆಜ್ಜೆ ಸಪ್ಪಳವಾದ ತಕ್ಷಣ ಚರಂಡಿಗೆ ಹಾರಿ ಮಾಯವಾಗುತ್ತದೆ ಎಂದು ಅವರು ತಿಳಿಸಿದರು. ನಾವು ನೋಡಿದ ಮೊಸಳೆಗಳಲ್ಲಿ ಒಂದು ಆರಡಿಗಳಷ್ಟು ಉದ್ದವಿದ್ದು, ಇನ್ನೊಂದು ಇದಕ್ಕಿಂತ ಚಿಕ್ಕದು ಎಂದು ಅವರು ತಿಳಿಸಿದರು.
ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಚರಂಡಿ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಎಲೆ ತೋಟ ನಿವಾಸಿಗಳು ಮತ್ತು ರಾಮಾನುಜ ರಸ್ತೆ ನಿವಾಸಿಗಳ ಹಸುಕರುಗಳು ಇದೇ ತೋಟಕ್ಕೆ ಮೇಯಲು ಹೋಗುತ್ತವೆ. ಒಂದು ಬಾರಿ ಕರುವಿನ ರಕ್ತದ ರುಚಿ ನೋಡಿರುವ ಮೊಸಳೆ ಮತ್ತೆ ಇದೇ ಭಾಗದಲ್ಲಿ ಠಿಕಾಣಿ ಹೂಡುವ ಸಾಧ್ಯತೆ ಇದೆ ಎಂದು ಸ್ಥಳೀಯ ನಿವಾಸಿ ಮಲ್ಲೇಶ್ ತಿಳಿಸಿದರು.
ಎಲೆತೋಟ, ಸೀವೇಜ್ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದ್ದು ಅಕ್ಟೋಬರ್, ನವೆಂಬರ್ ತಿಂಗಳಲ್ಲಿಯೇ ಕಾಣಿಸಿಕೊಂಡಿರುವುದು ವಿಶೇಷ. ಈ ವರ್ಷ ಜಿಎಲ್ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್ 15ರಂದು ಮೊದಲ ಬಾರಿಗೆ ಮೊಸಳೆ ಕಾಣಿಸಿಕೊಂಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿತ್ತು. ಅಕ್ಟೋಬರ್ 29 ರಂದು ಎಲೆತೋಟದ ಕಿರು ಸೇತುವೆ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ಮೊಸಳೆ ಮೊಬೈಲ್ ಕ್ಯಾಮೆರಾದಲ್ಲಿ ಪತ್ತೆಯಾಗಿತ್ತು. 2020 ಮತ್ತು 2021ರಲ್ಲೂ ನವೆಂಬರ್ ತಿಂಗಳಲ್ಲಿ ಸೀವೇಜ್ ಫಾರಂ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮೊಸಳೆ ಪತ್ತೆಯಾಗಿತ್ತು.
ನಮ್ಮ ಸಿಬ್ಬಂದಿ ಮೊಸಳೆ ಹಿಡಿಯಲು ಎರಡು ಬಾರಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಚರಂಡಿಯ ಕೊಳಚೆ ನೀರಿನೊಳಗೆ ಸೇರಿಕೊಂಡಾಗ ಅದರ ಇರುವು ಪತ್ತೆ ಮಾಡುವುದು ಕಷ್ಟ. ನೀರಿನಿಂದ ಮೇಲೆ ಬಂದರಷ್ಟೇ ಹಿಡಿಯಲು ಸಾಧ್ಯ. ನಾವು ಸೆರೆ ಕಾರ್ಯಾಚರಣೆ ಮುಂದುವರಿಸುತ್ತೇವೆ. – ಕರಿಕಾಳನ್, ಡಿಸಿಎಫ್ ಮೈಸೂರು
ಒಂದು ತಿಂಗಳಿನಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆಗೆ ನನ್ನ ಕರು ಬಲಿಯಾಗಿದೆ. ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಇದನ್ನು ಹಿಡಿಯುವಂತೆ ಶಾಸಕರಿಗೆ, ಸ್ಥಳೀಯ ನಗರಪಾಲಿಕೆ ಸದಸ್ಯರಿಗೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೆ ಸೆರೆ ಹಿಡಿಯುವ ಕಾರ್ಯಾಚರಣೆ ಸಫಲವಾಗಿಲ್ಲ. ಅಧಿಕಾರಿಗಳು ಗಂಭೀರವಾದ ಕ್ರಮ ಕೈಗೊಳ್ಳದಿದ್ದಲ್ಲಿ ಪಾಲಿಕೆ ಮುಂದೆ ಧರಣಿ ಕುಳಿತುಕೊಳ್ಳುತ್ತೇವೆ. -ಮಧುಕರ್, ರಾಮಾನುಜ ರಸ್ತೆ ನಿವಾಸಿ
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…