ಜಿಲ್ಲೆಗಳು

ಎಲೆತೋಟದಲ್ಲಿರುವುದು ಒಂದಲ್ಲ ಹಲವು ಮೊಸಳೆ ?

ಕರು ಭಕ್ಷಕ ಮೊಸಳೆಯ ಸೆರೆ ಕಾರ್ಯಾಚರಣೆ ವಿಫಲ, ಮತ್ತೆ ಕಾಣಿಸಿಕೊಂಡ ಮೊಸಳೆ

ಮೈಸೂರು: ನಗರದ ಜೆಎಎಸ್‌ ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗಕ್ಕೆ ಸಮೀಪದಲ್ಲಿಯೇ ಮತ್ತೊಂದು ಮೊಸಳೆ ಮತ್ತೆ ಕಾಣಿಸಿಕೊಂಡಿದೆ. ಸ್ಥಳೀಯರ ಪ್ರಕಾರ ಭಾನುವಾರ ಕಾಣಿಸಿಕೊಂಡ ಮೊಸಳೆಗಿಂತ ಇದು ಆಕಾರದಲ್ಲಿ ಭಿನ್ನವಾಗಿದ್ದು ಈ ಮೊಸಳೆಯೇ ಬೇರೆ ಎಂದು ಹೇಳುತ್ತಾರೆ.

ಸೋಮವಾರ ಮಧ್ಯಾಹ್ನದ ವೇಳೆಯಲ್ಲಿ ಮೊಸಳೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ನೋಡುತ್ತಿರುವಾಗಲೇ ಚರಂಡಿ ನೀರಿಗೆ ಹಾರಿ ಮಾಯವಾಗಿದೆ. ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆರ್‌ಎಫ್‌ಓ ಸುರೇಂದ್ರ, ಡಿ ಆರ್‌ಎಫ್‌ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು. ಮೋಟಾರ್‌ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.

ಸೋಮವಾರ ಈ ಕೆರೆಗೆ ಸಮೀಪದಲ್ಲಿಯೇ ಚರಂಡಿ ನೀರಿನಿಂದ ಮೇಲೆ ಬಂದ ಮೊಸಳೆ ಬಹು ಹೊತ್ತಿನವೆರೆಗೂ ಮುರಿದು ಬಿದ್ದ ತೆಂಗಿನ ಮರವೊಂದರ ಮೇಲೆ ಮಲಗಿತ್ತು. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ ಮೊಸಳೆ ಮತ್ತೆ ಚರಂಡಿ ನೀರು ಸೇರಿಕೊಂಡಿತ್ತು. ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ನಾವು ಹಲವು ಬಾರಿ ಈ ಮೊಸಳೆಗಳನ್ನು ನೋಡಿದ್ದೇವೆ ಎಂದು ರಾಮಾನುಜ ರಸ್ತೆ ನಿವಾಸಿ ಮಧುಕರ್, ಎಲೆ ತೋಟದಲ್ಲಿಅಡಿಕೆ ತೋಟ ಹೊಂದಿರುವ ಮರಿಸ್ವಾಮಿ ಮತ್ತು ಚಾಮರಾಜು ನಿವಾಸಿ ಆಂದೋಲನಕ್ಕೆ ತಿಳಿಸಿದರು.

ಕಳೆದ ಒಂದು ತಿಂಗಳಲ್ಲಿ ಹಲವು ಬಾರಿ ಮೊಸಳೆ ಕಾಣಿಸಿಕೊಂಡಿದ್ದು ಸ್ಥಳೀಯರನ್ನು ಆತಂಕಕ್ಕೆ ತಳ್ಳಿದೆ. ಇಲ್ಲಿನ ಅಡಿಕೆ ತೋಟದ ಮಧ್ಯೆ ವೀಳ್ಯದೆಲೆ ಬೆಳೆಯುವ ಜನರು ಈಗ ತೋಟಕ್ಕೆ ಹೋಗಲು ಹೆದರುತ್ತಿದ್ದಾರೆ. ಮೊಸಳೆ ಆಗಾಗ ಇಲ್ಲಿನ ಸಣ್ಣ ಸೇತುವೆ ಮೇಲೆ ಬಂದು ಮಲಗಿರುತ್ತದೆ, ಮನುಷ್ಯರ ಹೆಜ್ಜೆ ಸಪ್ಪಳವಾದ ತಕ್ಷಣ ಚರಂಡಿಗೆ ಹಾರಿ ಮಾಯವಾಗುತ್ತದೆ ಎಂದು ಅವರು ತಿಳಿಸಿದರು. ನಾವು ನೋಡಿದ ಮೊಸಳೆಗಳಲ್ಲಿ ಒಂದು ಆರಡಿಗಳಷ್ಟು ಉದ್ದವಿದ್ದು, ಇನ್ನೊಂದು ಇದಕ್ಕಿಂತ ಚಿಕ್ಕದು ಎಂದು ಅವರು ತಿಳಿಸಿದರು.

ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಚರಂಡಿ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಎಲೆ ತೋಟ ನಿವಾಸಿಗಳು ಮತ್ತು ರಾಮಾನುಜ ರಸ್ತೆ ನಿವಾಸಿಗಳ ಹಸುಕರುಗಳು ಇದೇ ತೋಟಕ್ಕೆ ಮೇಯಲು ಹೋಗುತ್ತವೆ. ಒಂದು ಬಾರಿ ಕರುವಿನ ರಕ್ತದ ರುಚಿ ನೋಡಿರುವ ಮೊಸಳೆ ಮತ್ತೆ ಇದೇ ಭಾಗದಲ್ಲಿ ಠಿಕಾಣಿ ಹೂಡುವ ಸಾಧ್ಯತೆ ಇದೆ ಎಂದು ಸ್ಥಳೀಯ ನಿವಾಸಿ ಮಲ್ಲೇಶ್‌ ತಿಳಿಸಿದರು.

ಎಲೆತೋಟ, ಸೀವೇಜ್‌ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದ್ದು ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿಯೇ ಕಾಣಿಸಿಕೊಂಡಿರುವುದು ವಿಶೇಷ. ಈ ವರ್ಷ ಜಿಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್‌ 15ರಂದು ಮೊದಲ ಬಾರಿಗೆ ಮೊಸಳೆ ಕಾಣಿಸಿಕೊಂಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿತ್ತು. ಅಕ್ಟೋಬರ್‌ 29 ರಂದು ಎಲೆತೋಟದ ಕಿರು ಸೇತುವೆ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ಮೊಸಳೆ ಮೊಬೈಲ್‌ ಕ್ಯಾಮೆರಾದಲ್ಲಿ ಪತ್ತೆಯಾಗಿತ್ತು. 2020 ಮತ್ತು 2021ರಲ್ಲೂ ನವೆಂಬರ್‌ ತಿಂಗಳಲ್ಲಿ ಸೀವೇಜ್‌ ಫಾರಂ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮೊಸಳೆ ಪತ್ತೆಯಾಗಿತ್ತು.

ನಮ್ಮ ಸಿಬ್ಬಂದಿ ಮೊಸಳೆ ಹಿಡಿಯಲು ಎರಡು ಬಾರಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಚರಂಡಿಯ ಕೊಳಚೆ ನೀರಿನೊಳಗೆ ಸೇರಿಕೊಂಡಾಗ ಅದರ ಇರುವು ಪತ್ತೆ ಮಾಡುವುದು ಕಷ್ಟ. ನೀರಿನಿಂದ ಮೇಲೆ ಬಂದರಷ್ಟೇ ಹಿಡಿಯಲು ಸಾಧ್ಯ. ನಾವು ಸೆರೆ ಕಾರ್ಯಾಚರಣೆ ಮುಂದುವರಿಸುತ್ತೇವೆ. – ಕರಿಕಾಳನ್‌, ಡಿಸಿಎಫ್‌ ಮೈಸೂರು 

 

 

ಒಂದು ತಿಂಗಳಿನಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆಗೆ ನನ್ನ ಕರು ಬಲಿಯಾಗಿದೆ. ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಇದನ್ನು ಹಿಡಿಯುವಂತೆ ಶಾಸಕರಿಗೆ, ಸ್ಥಳೀಯ ನಗರಪಾಲಿಕೆ ಸದಸ್ಯರಿಗೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೆ ಸೆರೆ ಹಿಡಿಯುವ ಕಾರ್ಯಾಚರಣೆ ಸಫಲವಾಗಿಲ್ಲ. ಅಧಿಕಾರಿಗಳು ಗಂಭೀರವಾದ ಕ್ರಮ ಕೈಗೊಳ್ಳದಿದ್ದಲ್ಲಿ ಪಾಲಿಕೆ ಮುಂದೆ ಧರಣಿ ಕುಳಿತುಕೊಳ್ಳುತ್ತೇವೆ. -ಮಧುಕರ್‌, ರಾಮಾನುಜ ರಸ್ತೆ ನಿವಾಸಿ

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

8 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

11 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

12 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

13 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

14 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

19 hours ago