ಮಡಿಕೇರಿ: ಸೇವಿಸಿದ ಆಹಾರದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಕಾರಣದೊಂದಿಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಂಪತಿ ಆಸ್ಪತ್ರೆಗೆ ದಾಖಲಾದ ಘಟನೆ ತಡರಾತ್ರಿ ಸಂಭವಿಸಿದೆ.
ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಇತ್ತೀಚೆಗಷ್ಟೆ ಅಧಿಕಾರ ಸ್ವೀಕಾರ ಮಾಡಿರುವ ಡಾ. ಆಕಾಶ್ ಹಾಗೂ ಪತ್ನಿ ಮಂಗಳವಾರ ರಾತ್ರಿ ಮನೆಯಲ್ಲಿ ಸೇವನೆ ಮಾಡಿದ ಆಹಾರದಲ್ಲಿ ವ್ಯತ್ಯಾಸ ಉಂಟಾದ ಹಿನ್ನೆಲೆಯಲ್ಲಿ ಈರ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ರಾತ್ರಿ ವೇಳೆ ಮನೆಯಲ್ಲಿ ಊಟ ಮಾಡಿದ ಬಳಿಕ ತಡರಾತ್ರಿ ಅಸ್ವಸ್ಥರಾದ ದಂಪತಿಯನ್ನು ಮನೆಯಲ್ಲಿದ್ದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಿದ ಬಳಿಕ ಗಣ್ಯರಿಗಾಗಿ ಮೀಸಲಿಟ್ಟಿರುವ ವಾರ್ಡ್ಗೆ ಸ್ಥಳಾಂತರ ಮಾಡಲಾಯಿತು. ವಿಷಯ ತಿಳಿದೊಡನೆ ರಾತ್ರಿಯೇ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಉಪವಿಭಾಗಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್ ಡಾ. ಕಾರ್ಯಪ್ಪ ಸೇರಿದಂತೆ ಹಿರಿಯ ತಜ್ಞ ವೈದ್ಯರುಗಳು ಖುದ್ದಾಗಿ ಹಾಜರಿದ್ದು, ಚಿಕಿತ್ಸೆ ನೀಡುವಲ್ಲಿ ಸಹಕರಿಸಿದರು. ವಾರ್ಡ್ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಆಹಾರ ಸೇವನೆಯಲ್ಲಿನ ವ್ಯತ್ಯಾಸದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾವುದೇ ತೊಂದರೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಆಹಾರ ಸೇವನೆಯಲ್ಲಿ ವ್ಯತ್ಯಾಸ: ಕೊಡಗು ಜಿ.ಪಂ CEO ಆಸ್ಪತ್ರೆಗೆ ದಾಖಲು




