Mysore
19
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಕೊಡಗು: ಮಾಧ್ಯಮ ಸಂವಾದದಲ್ಲಿ ಹತ್ತಾರು ಸಮಸ್ಯೆಗಳು

ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು.

ಕೊಡಗು ಪತ್ರತರ್ಕರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮಾಧ್ಯಮ ಸಂವಾದದಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಗಮನ ಸೆಳೆದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯತಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತಯಾರಾಗಿದೆ. ಗ್ರಾಪಂ ವ್ಯಾಪ್ತಿಯ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾ.ಪಂ ಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಇದಲ್ಲದೆ 29 ಇಲಾಖೆಗಳು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸುಂಟಿಕೊಪ್ಪದಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ಮಾರುಕಟ್ಟೆ ನಿರ್ಮಿಸಲಾಗುತ್ತಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯ ಜೊತೆಗೂಡಿ ರಸ್ತೆಯ ಒಂದು ಬದಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಹಿರಿಯರಾದ ಎಂ. ಎ. ವಸಂತ್ ಮಾತನಾಡಿ ವಿದ್ಯುತ್ ಅಡಚಣೆ, ನೀರಿನ ಸಮಸ್ಯೆಗಳಿಂದ ಬಡಾವಣೆ ಜನ ಪರದಾಡುವಂತಾಗಿದೆ. ಮುಂದಿನ ದಿನಗಳಲ್ಲಿ ತೊಂದರೆ ಎದುರಾದರೆ ಪಂಚಾಯಿತಿಯವರು ಕ್ರಮ ಕೈಗೊಳ್ಳಬೇಕು ಎಂದರು.

ಇದಕ್ಕೆ ಅಧ್ಯಕ್ಷ ಸುನಿಲ್ ಮಾತನಾಡಿ, ವಿದ್ಯುತ್ ಓವರ್ ಲೋಡ್ ಆಗಿ ಒಂದೇ ದಿನ ಮೂರು ಮೋಟಾರುಗಳು ಸುಟ್ಟು ಹೋಗಿವೆ. ಇದರಿಂದ ನೀರಿನ ಸಮಸ್ಯೆ ಉಂಟಾಗಿದೆ. ಆದರೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದೆ ಎಂದರು.

ಹಿರಿಯರಾದ ಡಿ.ನರಸಿಂಹ ಮಾತನಾಡಿ, ಮುಖ್ಯ ರಸ್ತೆ ಎರಡು ಬದಿಯಲ್ಲಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಇದರಿಂದ ಹಾಡಿಹೋಕರಿಗೆ ತುಂಬಾ ತೊಂದರೆ ಉಂಟಾಗಿದೆ. ಮಾಂಸದಂಗಡಿಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಮಾಂಸ, ಮೀನು ಮಾರಾಟ ತಾಂತ್ರಿಕ ದೋಷದಿಂದ ಮಾಡಲಾಗುತ್ತಿದೆ. 11 ಅಂಗಡಿಗಳ ಮಾಲೀಕರು ಉಚ್ಚ ನ್ಯಾಯಾಲದಲ್ಲಿ ಸ್ಟೇ ತಂದಿದ್ದಾರೆ. ಮುಂದಿನ ಆರು ತಿಂಗಳಲ್ಲಿ ಪಂಚಾಯತ್ ಸ್ವಂತ ಮಳಿಗೆಗೆ ಸ್ಥಳಾಂತರ ಮಾಡಲಾಗುತ್ತದೆ. ಶುಚಿತ್ವ ಕಾಪಾಡಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಮಾಧ್ಯಮ ಸಂವಾದದಲ್ಲಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ಕ್ಷೇಮಾಭಿವೃದ್ಧಿ ಅಧ್ಯಕ್ಷ ಜಿ.ವಿ. ರವಿಕುಮಾರ್, ನಿರ್ದೇಶಕರಾದ ವಿಶುಕುಮಾರ್, ರಂಜಿತ್ ಕವಲಪಾರ, ಗುರುದರ್ಶನ್, ಲಕ್ಷ್ಮೀಶ್, ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಸೆಬಾಸ್ಟಿನ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಕಾಂಗ್ರೆಸ್ ಮುಖಂಡ ಯಂಕನ ಶ್ರೀರಾಮ್ ಸೇರಿದಂತೆ ಹಲವರು ಸಂವಾದದಲ್ಲಿ ಪಾಲ್ಗೊಂಡಿದ್ದರು.

Tags:
error: Content is protected !!