ಕೊಡಗು

ಕೊಡಗು | ಬೆಳೆಹಾನಿ ಸಮೀಕ್ಷೆಯಲ್ಲಿ ನಿಖರ ಮಾಹಿತಿ ಒದಗಿಸಿ : ಸಚಿವ ಎನ್.ಎಸ್.ಭೋಸರಾಜು

ಮಡಿಕೇರಿ : ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ನಿಖರ ಅಂಕಿ ಅಂಶ ನೀಡಬೇಕೆಂದು ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು, ಹಾಗೆಯೇ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಸಂಬಂಧ ಅಂಕಿ-ಅಂಶ ನೀಡಬೇಕೆಂದು ಸೂಚಿಸಿದರು.

ಈ ಸಂಬಂಧ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಈ ಬಾರಿ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ೨೦೨೫ರ ಜ.೧ರಿಂದ ಸೆ.೧೪ರವರೆಗೆ ೨,೩೩೧ ಮಿ.ಮೀ. ವಾಡಿಕೆ ಮಳೆಗೆ ೨,೭೯೯ ಮಿ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು. ಈ ಬಾರಿ ಮರ ಬಿದ್ದು ಇಬ್ಬರು, ಮನೆ ಗೋಡೆ ಕುಸಿದು ಒಬ್ಬರು ಮೃತಪಟ್ಟಿದ್ದಾರೆ. ಹಾಗೆಯೇ ೨೩ ಜಾನುವಾರುಗಳು ಮೃತಪಟ್ಟಿದ್ದು, ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ವಿಪತ್ತನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಭತ್ತ, ಅಡಕೆ ಸಂಬಂಧಿಸಿದಂತೆ ಬೆಳೆ ಹಾನಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆ, ಕಂದಾಯ ಹಾಗೆಯೇ ಕಾಫಿ ಮಂಡಳಿಯವರು ಬೆಳೆ ಹಾನಿ ಸಂಬಂಧ ಜಂಟಿ ಸಮೀಕ್ಷೆ ಕೈಗೊಂಡಿದ್ದಾರೆ ಎಂದು ವಿವರಿಸಿದರು.

ಪ್ರಸ್ತುತ ಪ್ರಾಕೃತಿಕ ವಿಕೋಪ ನಿಧಿಯಡಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ರೂ.೩೫೦೫.೧೪ ಲಕ್ಷ ಹಣವಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಾನಿ ಸಂಬಂಧ ೪.೫೨ ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಹಾಗೆಯೇ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾಹಿತಿ ನೀಡಿ, ಮುಂಗಾರು ಸಂದರ್ಭದಲ್ಲಿ ಮುಟ್ಲು ಗ್ರಾಮ ವ್ಯಾಪ್ತಿಯಲ್ಲಿ ಭತ್ತ ಬೆಳೆಗೆ ಹಾನಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಮಂಥರ್ ಗೌಡ, ಬೆಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಗಮನಹರಿಸಬೇಕು. ರೈತರಲ್ಲಿ ವಿಶ್ವಾಸ ಮೂಡಿಸಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕು. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಸಮೀಕ್ಷೆ ಕೈಗೊಳ್ಳಬೇಕು ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಇಬ್ರಾಹಿಂ ಮಾತನಾಡಿ, ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಳೆ ಹಾನಿ ಸಂಬಂಧ ೪.೫೨ ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಸ್ತೆ ನಿರ್ವಹಣೆಗಾಗಿ ಸರ್ಕಾರದಿಂದ ೧೪ ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ಪಂಚಾಯತ್ ರಾಜ್ ಕಾರ್ಯಪಾಲಕ ಇಂಜಿನಿಯರ್ ಜಿ.ಕೆ.ನಾಯಕ್ ಮಾಹಿತಿ ನೀಡಿ, ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ, ತಡೆಗೋಡೆ, ಮೋರಿ, ಕೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ೫೪ ಕೋಟಿ ರೂ. ಬಿಡುಗಡೆಗೆ ಎನ್‌ಡಿಆರ್‌ಎಫ್ ನಡಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಂಚಾಯತ್ ರಾಜ್ ಎಂಜಿನಿಯರ್ ವಿಭಾಗ ಮತ್ತು ಉಪ ವಿಭಾಗದಲ್ಲಿ ಸಹಾಯಕ ಹಾಗೂ ಕಿರಿಯ ಎಂಜಿನಿಯರ್‌ಗಳ ಕೊರತೆ ಇದ್ದು, ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ ಎಂದು ಸಭೆಯಲ್ಲಿ ಅವಲತ್ತುಕೊಂಡರು.

ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಸಹಾಯಕ ಹಾಗೂ ಕಿರಿಯ ಎಂಜಿನಿಯರ್‌ಗಳು ಇಲ್ಲ ಎಂದು ಅಭಿವೃದ್ಧಿ ಕೆಲಸ ನಿಲ್ಲಿಸಲು ಸಾಧ್ಯವಿಲ್ಲ. ಮಳೆ ಹಾನಿ ಸೇರಿದಂತೆ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಳೆದ ಬಾರಿಯ ಮಳೆಹಾನಿಯ ಕಾಮಗಾರಿಯ ಮಾಹಿತಿ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಜೊತೆ ದೂರವಾಣಿ ಮುಖಾಂತರ ಚರ್ಚಿಸಿ ಸಹಾಯಕ ಹಾಗೂ ಕಿರಿಯ ಅಗತ್ಯ ಎಂಜಿನಿಯರ್‌ಗಳನ್ನು ನಿಯೋಜಿಸುವಂತೆ ಕೋರಿದರು.

ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago