Mysore
26
clear sky

Social Media

ಶನಿವಾರ, 31 ಜನವರಿ 2026
Light
Dark

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಹುಂಡಿ ಒಳಮಾಳ ಗ್ರಾಮದ ನಿವಾಸಿ ರತೀಫ್ (67) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ರತೀಫ್ ಅವರು ತೋಟದ ಕೆಲಸದಲ್ಲಿ ನಿರತರಾಗಿದ್ದ ವೇಳೆ ಅರಣ್ಯ ಪ್ರದೇಶದಿಂದ ಹೊರಬಂದ ಕಾಡಾನೆ ಹಠಾತ್ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿದ್ದು, ತೋಟಗಳು ಮತ್ತು ಕೃಷಿ ಭೂಮಿಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವುದರ ಜೊತೆಗೆ ಜನರ ಜೀವಕ್ಕೆ ಅಪಾಯ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮೃತ ರತೀಫ್ ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳ ಚಲನವಲನ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಕಾಡಾನೆ–ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಕಾಡಾನೆಗಳ ಚಲನವಲನದ ಮೇಲೆ ನಿಗಾ ವಹಿಸಿ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.

Tags:
error: Content is protected !!