ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳಪೆ ಕಾಮಗಾರಿ ಕುರಿತು ಗ್ರಾಮಸ್ಥರು ಸಂಸದ ಯದುವೀರ್ ಒಡೆಯರ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಸದರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಇದನ್ನು ಓದಿ: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಚುರುಕು
ಬಳಿಕ ಜಿಲ್ಲಾ ಪಂಚಾಯತ್ ಸಿಇಒ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಹೈಸೊಡ್ಲೂರು ಗ್ರಾಮದಲ್ಲಿ 123 ಮನೆಗಳನ್ನು ಯೋಜನೆ ಅಡಿಯಲ್ಲಿ ಗುರುತಿಸಿ 83 ಮನೆಗಳಿಗೆ ಮಾತ್ರ ಸಂಪರ್ಕಿಸುವ ಕೆಲಸ ಆಗಿದೆ. ಕಳಪೆ ಕಾಮಗಾರಿ ಹಾಗೂ ನಿಧಾನಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿದಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಲ್ಲದೇ ಅಧಿಕಾರಿಗಳು ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಕೈಜೋಡಿಸಿ ಮಾಹಿತಿ ಹಂಚಿಕೊಂಡು ಕೆಲಸ ಮಾಡಬೇಕು. ಹತ್ತು ದಿನಗಳ ಕಾಲಾವಕಾಶದಲ್ಲಿ ಇಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.





