ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಬಳಿಕ ಸಂಸದ ಯದುವೀರ್ ಒಡೆಯರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸಚಿವರ ಭೇಟಿ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಹ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿದೆ ಎಂದು ತಿಳಿಸಿದ್ದಾರೆ. ಆದರೆ ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ.




