ಜಿಲ್ಲೆಗಳು

ಮೈಸೂರಿನಲ್ಲಿ ಮತ್ತೆ ಚಿರತೆ ಸದ್ದು, ಆರ್‌ಎಂಪಿ ಬಳಿ ಚಿರತೆ ಸೆರೆ

ಸಿಎಫ್‌ಟಿಆರ್‌ಐ ಕ್ಯಾಂಪಸ್‌ ನಲ್ಲಿ ಚಿರತೆ ಕಾಣಿಸಿಕೊಂಡ ಆತಂಕ, ಶಾಲೆಗೆ ರಜೆ

ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಸದ್ದು ಮುಂದುವರಿದಿದೆ. ನಗರದ ಇಲವಾಲದ ಬಳಿ ಇರುವ ಆರ್‌ಎಂಪಿ ಘಟಕದ ಬಳಿ ಮಂಗಳವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಇದೇ ವೇಳೆ ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್‌ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಇಲವಾಲ ಭಾಗದಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಆರ್‌ ಎಂಪಿ ಘಟಕ ಸೇರಿದಂತೆ ನಾನಾ ಭಾಗಗಳಲ್ಲಿ ಬೋನು ಇರಿಸಲಾಗಿತ್ತು. ಮಂಗಳವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.

ಐದರಿಂದ ಆರು ವರ್ಷದ ಗಂಡು ಚಿರತೆ ಇದಾಗಿದ್ದು, ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದ ಬಳಿಕ ಕಾಡಿಗೆ ಬಿಡಲಾಗುವುದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್‌ ಆಂದೋಲನ ಡಿಜಿಟಲ್‌ ಗೆ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯೊಂದರಲ್ಲಿಯೇ ಕಳೆದ ಮೂರು ವಾರಗಳಲ್ಲಿ  ಸೆರೆಸಿಕ್ಕ 9ನೇ ಚಿರತೆ ಇದಾಗಿದೆ.

ಇದೇ ವೇಳೆ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ಮಂಗಳವಾರ ರಾತ್ರಿ ಚಿರತೆ ಕಾಣಿಸಿಕೊಂಡಿರುವ ವಿಚಾರ ಸಿಎಫ್‌ ಟಿ ಆರ್‌ ಐ ಸಿಬ್ಬಂದಿ ಮತ್ತು ಶಾಲಾ ಮಕ್ಕಳಲ್ಲಿ ಬುಧವಾರ ಆತಂಕಕ್ಕೆ ಕಾರಣವಾಯಿತು. ಚಿರತೆ ಕಾಣಿಸಿಕೊಂಡ ಸುದ್ದಿ ಹಿನ್ನೆಲೆಯಲ್ಲಿ ಸಿಎಫ್‌ ಟಿಆರ್ ಐ ಕ್ಯಾಂಪಸ್ ನಲ್ಲಿರುವ ಒಂದರಿಂದ 12 ತರಗತಿ ಮಕ್ಕಳಿಗೆ ರಜೆ ಘೋಷಿಸಲಾಯಿತು. ಪೋಷಕರು ಆತಂಕದಲ್ಲಿಯೇ ಬಂದು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದರು.

ಚಿರತೆಯ ಓಡಾಟವನ್ನು ಸಂಸ್ಥೆಯ ಕಾವಲು ಸಿಬ್ಬಂದಿ ಪ್ರಭಾಕರ್‌ ಎಂಬವರು ಗಮನಿಸಿ ಸಿಎಫ್‌ಟಿಆರ್‌ಐ ನಿರ್ದೇಶಕರಿಗೆ ತಿಳಿಸಿದ್ದು ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರೆನ್ನಲಾಗಿದೆ.

ಅರಣ್ಯ ಇಲಾಖೆ ಬುಧವಾರ ಬೆಳಗ್ಗಿನಿಂದಲೇ ಕಾರ್ಯ ಪ್ರವೃತ್ತವಾಗಿದ್ದು 10 ಮಂದಿ ಸಿಬ್ಬಂದಿಗಳನ್ನು ಚಿರತೆ ಜಾಡು ಪತ್ತೆಗೆ ನೇಮಿಸಲಾಯಿತು. ಆದರೆ ಚಿರತೆಯ ಹೆಜ್ಜೆ ಗುರುತು ಎಲ್ಲೂ ಪತ್ತೆಯಾಗಿಲ್ಲ. ಕ್ಯಾಂಪಸ್‌ ನಲ್ಲಿರುವ ಪಾಳು ಬಿದ್ದ ಸುಮಾರು 60 ಕ್ವಾರ್ಟರ್ಸ್‌ ನಲ್ಲೂ ಶೋಧ ನಡೆಸಲಾಯಿತು. ಆದರೆ ಎಲ್ಲೂ ಚಿರತೆಯ ಕುರುಹು ಕಂಡು ಬಂದಿಲ್ಲ.

ಸದ್ಯ ಕ್ಯಾಂಪಸ್ಸಿನಲ್ಲಿ ಒಂದು ಬೋನು ಇಡಲಾಗಿದೆ. ಅಗತ್ಯ ಬಿದ್ದರೆ ಮತ್ತೊಂದು ಬೋನು ಇಡಲಾಗುತ್ತದೆ. ಕ್ಯಾಂಪಸ್‌ ನಲ್ಲಿ ರಾತ್ರಿ ದೃಶ್ಯಗಳನ್ನು ಸೆರೆ ಹಿಡಿಯುವ ಸಿಸಿ ಕೆಮೆರಾ ಗಳಿಲ್ಲ. ಇದಕ್ಕಾಗಿ ತಕ್ಷಣವೇ ನಾಲ್ಕು ನೈಟ್ ಕ್ಯಾಪ್ಚರಿಂಗ್‌ ಸಿಸಿ ಕೆಮೆರಾ ಅಳವಡಿಸಲಾಗುತ್ತಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್‌ ಆಂದೋಲನ ಡಿಜಿಟಲ್‌ ಗೆ ತಿಳಿಸಿದ್ದಾರೆ. ನಾಳೆಯಿಂದ ಎಂದಿನಂತೆ ಶಾಲೆ ನಡೆಯಲಿದೆ. ಚಿರತೆಯ ಬಗ್ಗೆ ಭಯ ಬೇಕಾಗಿಲ್ಲ ಎಂದವರು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್‌ಬಿಐ) ಆವರಣದಲ್ಲಿ ಚಿರತೆಯು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಆರ್‌ ಬಿ ಐ ಕ್ಯಾಂಪಸ್‌ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಬಲೆಗೆ ಬಿದ್ದಿರಲಿಲ್ಲ. ಈ ಹಿಂದೆ ಬೆಮೆಲ್‌ ಕ್ಯಾಂಪಸ್‌, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.

ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಆಹಾರ ಹುಡುಕಿಕೊಂಡು ಬರುವ ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago