Mysore
26
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಂಡ್ಯ : ಸಚಿವ ಅಶ್ವತ್ಥ ನಾರಾಯಣ ವಿರುದ್ಧ ದೂರು

ಮಂಡ್ಯ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಮೇಲಕ್ಕೆ ಕಳುಹಿಸಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸುವಂತೆ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ, ಜಿಲ್ಲಾ ಕುರುಬರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರಿಗೆ ದೂರು ಸಲ್ಲಿಸಿದರು.
ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಫೆ.14ರಂದು ಮಂಗಳವಾರ ಮಂಡ್ಯ ತಾಲ್ಲೂಕು, ಸಾತನೂರು ಬೆಟ್ಟದ ಕಂಬದ ನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಟಿಪ್ಪು ಸುಲ್ತಾನರ ವಿರುದ್ಧ ಮಾತನಾಡುವಾಗ ಟಿಪ್ಪು ಸುಲ್ತಾನ್‌ನನ್ನು ಹೊಡೆದು ಮೇಲಕ್ಕೆ ಕಳುಹಿಸಿದ ಹಾಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಮೇಲಕ್ಕೆ ಕಳುಹಿಸಿ ಎಂದು ಕರೆ ಕೊಟ್ಟಿರುತ್ತಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಈ ಪದವನ್ನು ಬಳಸಿರುವುದು ಸರಿಯಲ್ಲ. ಈ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಚ್.ನಾಗರಾಜು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಪ್ರಧಾನ ಕಾರ್ಯದರ್ಶಿ ಶಶಿಧರ್, ಉಪಾಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸಾತನೂರು ಕೃಷ್ಣ, ಹಿಂದುಳಿದ ವರ್ಗದ ಮುಖಂಡರಾದ ರಾಜಣ್ಣ, ಅಮ್ಜದ್ ಪಾಷ, ಸುಂಡಹಳ್ಳಿ ಮಂಜುನಾಥ್, ಗುರುರಾಜು, ರಮೇಶ್, ಶ್ರೀನಿವಾಸ್ ಹಾಜರಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!