Mysore
17
overcast clouds

Social Media

ಶನಿವಾರ, 10 ಜನವರಿ 2026
Light
Dark

ಆಹಾರದ ಮಹತ್ವ ಕುರಿತು ಅರಿವು ಅಗತ್ಯ : ಕೃಷಿ ಸಚಿವ.ಚಲುವರಾಯಸ್ವಾಮಿ

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ ಕೊರತೆಯನ್ನು ಎದುರಿಸುತ್ತಿತ್ತು ಆದರೆ ಇಂದು ಬೇರೆ ದೇಶಗಳಿಗೆ ಭಾರತ ಆಹಾರ ರಫ್ತು ಮಾಡುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.

ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಹಾರ ಆಯೋಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ (ರಿ) ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು “ಡಿಜಿಟಲ್ ನ್ಯಾಯದ ಮೂಲಕ ಪರಿಣಾಮಕಾರಿ ಹಾಗೂ ತ್ವರಿತ ವಿಲೇವಾರಿ” ಎಂಬ ಘೋಷವಾಕ್ಯದಡಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಬಗ್ಗೆ ಎಲ್ಲರೂ ಜಾಗೃತರಾಗಿ. ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಮನಮೋಹನ್ ಸಿಂಗ್ ಪ್ರಧಾನಿಯಾದ ಸಂದರ್ಭದಲ್ಲಿ ಭಾರತದ ಪ್ರತಿಯೊಬ್ಬ ಪ್ರಜೆಗೂ ಆಹಾರ ಭದ್ರತೆಯನ್ನು ನೀಡುವ ಸಲುವಾಗಿ ಆಹಾರ ಆಯೋಗವನ್ನು ಜಾರಿಗೆ ತಂದರು. ಎಲ್ಲಾ ಬಡ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಸಿಗಬೇಕು ಎಂಬ ನಿಟ್ಟಿನಲ್ಲಿ ಆಹಾರ ಅಧಿನಿಯಮದ ಕಾಯ್ದೆ ಜಾರಿಗೊಳಿಸಲಾಯಿತು ಎಂದು ತಿಳಿಸಿದರು.

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಹಾರ ಅಧಿನಿಯಮ ಕಾಯ್ದೆಯಡಿ ಪ್ರತಿ ವ್ಯಕ್ತಿಗೆ 5 ಕೆ.ಜಿ ಅನ್ನು ವಿತರಿಸುವ ಯೋಜನೆಯನ್ನು ಜಾರಿಗೊಳಿಸಿದರು. ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ರಾಜ್ಯ ಜನರನ್ನು ಹಸಿವು ಮುಕ್ತರಾಗಿಸಲು ತಲಾ 10 ಕೆ.ಜಿ.ಅಕ್ಕಿಯನ್ನು ವಿತರಣೆ ಮಾಡಿದರು. ಅಕ್ಕಿಯನ್ನು ನೀಡುವುದರಿಂದ ಅಕ್ರಮ ಸಂಭವಿಸಬಹುದು ಎಂಬ ಉದ್ದೇಶದಿಂದ ರಾಗಿ, ಗೋಧಿ, ಎಣ್ಣೆ ಕೊಡಲು ಹೊಸ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇವತ್ತಿಗೂ ಆಹಾರ ಸಿಗದೆ ಇರುವ ಜನರು ಇದ್ದಾರೆ. ಕೆಲವರು ಆಹಾರದ ಉಪಯೋಗ ಪಡೆದುಕೊಳ್ಳದೆ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಗ್ರಾಹಕರಿಗೆ ಸಂಕಷ್ಟ ಪರಿಸ್ಥಿತಿ ಬರದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ಸಾರ್ವಜನಿಕರಿಗೆ ನ್ಯಾಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಆಹಾರ ಆಯೋಗ ಕ್ರಮ ವಹಿಸಲಾಗುತ್ತಿದೆ ಅದರ ಕೆಳಗೆ ಜಿಲ್ಲಾಡಳಿತ ಇದರ ಜವಾಬ್ದಾರಿ ನಿರ್ವಹಿಸಬೇಕು ಎಂದು ಹೇಳಿದರು.

ನಮ್ಮ ದೇಶದ ವ್ಯವಸ್ಥೆಯಲ್ಲಿ ಬಡವರು ಹಾಗೂ, ಸಾಮಾನ್ಯ ಜನಕ್ಕೂ ಆಹಾರ ಒದಗಿಸುವ ಕೆಲಸವಾಗಬೇಕು. ಕಾನೂನು ಜಾರಿ ಗೊಳಿಸಿ ಗ್ರಾಹಕರ ಹಿತ ಕಾಯುವುದು ಸರ್ಕಾರದ ಕರ್ತವ್ಯ. ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ರಾಜ್ಯದ 31 ಜಿಲ್ಲೆಗಳಿಗೂ ಭೇಟಿ ನೀಡಿ ಆಹಾರ ಸುರಕ್ಷತೆಯ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಾ ಬರುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಅವರು ಮಾತನಾಡಿ , ಗ್ರಾಹಕರು ಮೋಸ ಹೋಗದ ರೀತಿ ಅರಿವು ಮೂಡಿಸುವ ಕಾರ್ಯವನ್ನು ನಡೆಸಲಾಗುತ್ತಿದೆ. ಗ್ರಾಹಕರಿಗೆ ಗ್ರಾಹಕ ಕಾನೂನಿನ ಕುರಿತು ಅರಿವು ಇರಬೇಕು. ಅನ್ಯಾಯಕ್ಕೆ ಒಳಗಾದ ಗ್ರಾಹಕರಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತಿದೆ. ಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸುವ ಕೆಲಸ ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಆಹಾರ ಭದ್ರತೆ ಕಾಯ್ದೆಯಡಿ ಎಲ್ಲಾ ಗ್ರಾಹಕರಿಗೂ ನ್ಯಾಯ ಒದಗಿಸುವ ಕೆಲಸವಾಗುತ್ತಿದೆ. ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ ಕೊಡುವುದು ಆಹಾರ ಭದ್ರತೆ ಕಾಯ್ದೆಯ ಮೂಲ ಉದ್ದೇಶ. ನ್ಯಾಯಬೆಲೆ ಅಂಗಡಿಗಳಲ್ಲಿ ವೈಜ್ಞಾನಿಕವಾಗಿ ಆಹಾರ ಸುರಕ್ಷಿತೆ ಮಾಡಬೇಕು ಎಂದು ಹೇಳಿದರು.

ಗ್ರಾಹಕರಿಗೆ ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಎಲ್ಲರ ಜವಾಬ್ದಾರಿಯಾಗಿದೆ. ಕೆಲವು ಕಡೆ ಪಡಿತರ ಚೀಟಿ ರದ್ದಾಗಿದೆ ಅದನ್ನ ಸದ್ಯದಲ್ಲೇ ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಪಡಿತರ ಅಂಗಡಿಗಳಲ್ಲಿ ಅನ್ಯಾಯವಾದರೆ ಗ್ರಾಹಕರು ದೂರು ನೀಡಬಹುದು ಸಂಬಂಧಪಟ್ಟವರ ಪೇಟೆ ಕ್ರಮ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ಊಟದಲ್ಲಿ ಕಳಪೆ ಕಂಡು ಬಂದರೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕತೆ ಹೆಚ್ಚಿಸಲು ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ ಹಾಗೂ ಗರ್ಭಿಣಿಯರಿಗೆ ಸಹಾಯಧನವನ್ನು ನೀಡಲಾಗುತ್ತಿದೆ ಅರ್ಹರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಿ ಪೌಷ್ಟಿಕಾಂಶವನ್ನು ನೀಡಲಾಗುತ್ತದೆ. ವೃದ್ದರಿಗೆ ಮಾಸಾಸನ ಬರದಿದ್ದರೆ ಕೊಡಿಸುವ ಕೆಲಸ ಮಾಡಲಾಗುತ್ತಿದೆ. ಆಹಾರ ಭದ್ರತೆಯ ಕಾವಲುಗಾರರಾಗಿ ನಾವು ಕೆಲಸ ಮಾಡ್ತಿದ್ದೇವೆ. ಆಹಾರ ಹಕ್ಕುಗಳ ಬಗ್ಗೆ ಜನರು ಜಾಗೃತರಾಗಿ ಎಂದು ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವಿ ಜೆ. ಮೈ ಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್ ಸತ್ಯಾನಂದ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಸಂಘದ ಅಧ್ಯಕ್ಷ ವಂಸತ್ ಕುಮಾರ್, ನ್ಯಾಷನಲ್ ಲಾ ಕಾಲೇಜಿನ ತರಬೇತಿ ಸಂಯೋಜಕರಾದ ಕುಮಾರಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ. ಡಾ. ಶಶಿಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!