Categories: ಮಂಡ್ಯ

ಮಂಡ್ಯ: ಭ್ರೂಣ ಹತ್ಯೆಯಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ  ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿ,  ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು(ನ.25) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ (ದುರ್ಬಳಕೆ ಮತ್ತು ತಡೆ) ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಪಾಸಣಾ ಮೇಲ್ವಿಚಾರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೂ ಭ್ರೂಣಹತ್ಯೆಗೆ ಸಂಬಂಧಿಸಿದಂತೆ ದಾಳಿ ನಡೆಸಿದಾಗ ಸ್ಕಾನಿಂಗ್ ಸೆಂಟರ್‌ಗಳಲ್ಲಿ ಹೆಚ್ಚುವರಿ ಸ್ಕಾನಿಂಗ್ ಯಂತ್ರಗಳು ಇರುವುದು ಕಂಡುಬಂದಿದ್ದು, ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳನ್ನು ವಶಪಡಿಸಿಕೊಂಡು ಸ್ಕ್ಯಾನಿಂಗ್ ಸೆಂಟರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹೆಣ್ಣು ಭ್ರೂಣಪತ್ತೆ ಮಾಡುತ್ತಿದ್ದ ಹಾಗೂ ಅಕ್ರಮ ಗರ್ಭಪಾತ ನಡೆಸುತ್ತಿದ್ದ ಒಟ್ಟು 37 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇವರಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ಜನರು ಈ ರೀತಿಯ ಕೃತ್ಯಕ್ಕೆ ಮುಂದಾಗುವುದಿಲ್ಲ. ಜಿಲ್ಲೆಯಲ್ಲಿ ಯಾವುದೇ ಭ್ರೂಣ ಹತ್ಯೆ ಮತ್ತು ಭ್ರೂಣ ಪತ್ತೆಯಂತಹ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಕೂಡಲೇ ಪಿ ಸಿ ಹಾಗೂ ಪಿ ಎನ್ ಡಿ ಟಿ ಕಾಯ್ದೆಯಡಿ ಕಠಿಣ ಕ್ರಮ ಕೈಗೊಂಡು ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗಿ ಎಂದರು.

ವೈದ್ಯರ ಸಲಹೆ ಇಲ್ಲದೆ ಮೆಡಿಕಲ್ ಸ್ಟೋರ್ ಗಳಲ್ಲಿ ಸಿಗುವ ಮಾತ್ರೆಗಳನ್ನು ಖರೀದಿಸಿ ಅಕ್ರಮ ಗರ್ಭಪಾತ ನಡೆಯುತ್ತಿವೆ ಎಂಬ ದೂರು ಕೇಳಿ ಬರುತ್ತಿದೆ. ಎಲ್ಲಾ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ನಡೆಸಿ ಔಷಧಿ ಮಾರಾಟಗಾರರಿಗೆ ಸೂಕ್ತ ಕಾರ್ಯಾಗಾರವನ್ನು ಏರ್ಪಡಿಸಿ ತಿಳುವಳಿಕೆ ಮೂಡಿಸುವಂತೆ ತಿಳಿಸಿದರು.

ಪ್ರತಿ ಸ್ಕಾನಿಂಗ್ ಸೆಂಟರ್ ಗಳಿಗೆ ಧಿಡೀರ್ ಭೇಟಿ ನೀಡಿ ತಪಾಸಣೆ ಮಾಡಬೇಕು ಹಾಗೂ ಯಾವುದೇ ರೀತಿಯ ಅನುಮಾನ ಬಂದಲ್ಲಿ ಅವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಿ. ಭ್ರೂಣ ಹತ್ಯೆ ತಡೆಗಟ್ಟುವ ಬಗ್ಗೆ ಪ್ರತಿ ಗ್ರಾಮ ಸಭೆಗಳಲ್ಲಿ ಚರ್ಚೆ ನಡೆಸಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಡಿಸೆಂಬರ್ 20, 21, 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದಲ್ಲಿ ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ವಿಶೇಷ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 59 ಸ್ಕಾನಿಂಗ್ ಸೆಂಟರ್ ಗಳಿವೆ. ಮಂಡ್ಯ ತಾಲ್ಲೂಕಿನಲ್ಲಿ- 27, ಮದ್ದೂರು – 6, ಮಳವಳ್ಳಿ -7, ಪಾಂಡವಪುರ -5, ಶ್ರೀರಂಗಪಟ್ಟಣ -3, ಕೆ ಆರ್ ಪೇಟೆ -6, ನಾಗಮಂಗಲ ತಾಲ್ಲೂಕಿನಲ್ಲಿ – 5 ಸ್ಕಾನಿಂಗ್ ಸೆಂಟರ್ ಗಳಿವೆ. ಪ್ರತಿ 3 ತಿಂಗಳಿಗೊಮ್ಮೆ ಸ್ಕಾನಿಂಗ್ ಸೆಂಟರ್ ಗಳ ಮೇಲೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ  ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್, ಜಿಲ್ಲಾ ಹಿರಿಯ ನಾಗರೀಕರ ಹಾಗೂ ಅಂಗವಿಕಲರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ಸ್ತ್ರೀ ರೋಗ ತಜ್ಞೆ ಡಾ ಜ್ಯೋತಿ, ಡಾ ಮನೋಹರ್, ನಿವೃತ್ತ ಡಿಹೆಚ್ಒ  ಡಾ ಮರೀಗೌಡ, ಮುಖಂಡರುಗಳಾದ ಜಯಲಕ್ಷ್ಮಿ, ಜನಾರ್ಧನ್, ಡಾ ದೇವಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

3 mins ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

22 mins ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

54 mins ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

2 hours ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

2 hours ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

2 hours ago