ಮಂಡ್ಯ : ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಹೆದ್ದಾರಿಯಲ್ಲಿಯೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ 25 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಟೋಲ್ ಬಳಿ ಜರುಗಿದೆ.
ಇಂದು ಮುಂಜಾನೆ 5 ಗಂಟೆ ವೇಳೆಯಲ್ಲಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಬಸ್ ಚಲಿಸುತ್ತಿತ್ತು. ಈ ವೇಳೆ ಕದನಹಳ್ಳಿ ಟೋಲ್ ಬಳಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಸ್ವಲ್ಪ ಸಮಯದಲ್ಲೇ ಬಸ್ ಧಗಧಗಿಸಿ ಹೊತ್ತಿ ಉರಿದಿದೆ. ನೋಡ ನೋಡುತ್ತಿದಂತೆ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾವಾಗಿದೆ.
ಚಾಲಕನ ಸಮಯ ಪ್ರಜ್ಞೆಯಿಂದಾಗಿ, ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದಾರೆ. ಎಲ್ಲಾ ಪ್ರಯಾಣಿಕರು ಲಗೇಜ್ ಸಹಿತ ಬಸ್ನಿಂದ ಕೆಳಗೆ ಇಳಿದಿದ್ದಾರೆ.
ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





