ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು ಪತ್ತೆಯಾಗಿವೆ.
ಸ್ಕಾರ್ಪಿಯೋ ಕಾರಿನಲ್ಲಿ ಕರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕಾರಿನ ಚಾಲಕ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾರು ಯಾರಿಗೆ ಸೇರಿದ್ದು? ಕರುಗಳನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ.
ಕರುಗಳ ಶಬ್ದ ಬರಬಾರದೆಂದು ಅವುಗಳ ಬಾಯಿಯನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಜತೆಗೆ, ಕಾಲುಗಳನ್ನು ಕಟ್ಟಿ ಹಾಕಿದ್ದ ಕರುಗಳನ್ನು ಒಂದರ ಮೇಲೊಂದರಂತೆ ತುಂಬಿದ್ದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಉಳಿದ ಕರುಗಳನ್ನು ರಕ್ಷಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲಿ ಮಗುಚಿ ಬಿದ್ದ ಹಿನ್ನೆಲೆಯಲ್ಲಿ ಕರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.





