ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಜೂನ್ ೦೧ರ ಬೆಳಿಗ್ಗೆ ೧೦.೩೦ಕ್ಕೆ ನಗರದ ಶ್ರೀ ಲಕ್ಷ್ಮೀ ಜರ್ನಾಧನ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅವರ ಅಭಿಮಾನಿ ಬಳಗವು ನಿರ್ಧರಿಸಿದೆ ಎಂದರು.
ಕಾರ್ಯಕ್ರಮವನ್ನು ಸಚಿವರ ಸಹೋದರ ಲಕ್ಷ್ಮೀಕಾಂತ್ ಉದ್ಘಾಟಿಸಲಿದ್ದು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಪ್ರಾಂಶುಪಾಲ ಎಸ್.ಬಿ.ಶಂಕರೇಗೌಡ ಅವರು ಪ್ರಧಾನ ಭಾಷಣ ಮಾಡಲಿದ್ದು, ಮನ್ಮುಲ್ ಅಧ್ಯಕ್ಷ ಶಿವಪ್ಪ, ಮೂಡಾ ಅಧ್ಯಕ್ಷ ನಯೀಂ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ ಮಾತನಾಡಿ, ಸಚಿವರ ಜನ್ಮದಿನದ ಹಿನ್ನಲೆ ಮಂಡ್ಯ ಕೃಷಿ ವಿವಿ, ವಿ.ಸಿ.ಫಾರಂ, ಮಿಮ್ಸ್ ರಕ್ತಕೋಶ, ರೆಡ್ಕ್ರಾಸ್, ಡಿಆರ್ಪಿಬಿ ಫೌಂಡೇಷನ್ ವತಿಯಿಂದ ಜೂ.೦೩ರಂದು ವಿ.ಸಿ.ಫಾರಂನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ರಕ್ತದಾನ ಶಿಬಿರವನ್ನು ಶಾಸಕ ಪಿ.ರವಿಕುಮಾರ್ಗೌಡ ಉದ್ಘಾಟಿಸಲಿದ್ದು, ಕೃಷಿ ವಿವಿಯ ಡೀನ್ ಫಾತಿಮಾ ಅಧ್ಯಕ್ಷತೆ ವಹಿಸುವರು, ಸಚಿವರ ಪುತ್ರ ಸಚಿನ್ ಚಲುವರಾಯಸ್ವಾಮಿ ಅವರು ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿ ಉಭಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು, ಅಭಿಮಾನಿಗಳು ಭಾಗವಹಿಸುವಂತೆ ಮನವಿ ಮಾಡಿದರು.
ಮೈಷುಗರ್ ಆವರಣದಲ್ಲಿ ಮರ ಕಡಿದಿರುವ ಸಂಬಂಧ ಬಿಜೆಪಿ ಮುಖಂಡ ಶಿವಕುಮಾರ್ ಅವರು ಮೈಷುಗರ್ ಅಧ್ಯಕ್ಷರ ಮೇಲೆ ಇಲ್ಲಸಲ್ಲದ ಹಾಗೂ ಆರೋಪ ಮಾಡಿದ್ದು, ಈ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಬೇಕು. ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ರಮೇಶ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಜಿಲ್ಲಾಧ್ಯಕ್ಷ ಕೃಷ್ಣ ಸಾತನೂರು, ಅಲ್ಪಾಸಂಖ್ಯಾತ ಸಮಿತಿ ಜಿಲ್ಲಾಧ್ಯಕ್ಷ ಮುಜಾಹಿದ್ ಅಲಿಖಾನ್, ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ವಿಜಿಕುಮಾರ್ ಇದ್ದರು.





