Mysore
24
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಪೌರ ಕಾರ್ಮಿಕರು ಸುರಕ್ಷತಾ ಪರಿಕರ ಬಳಸಿ : ಜಿಲ್ಲಾಧಿಕಾರಿ ಕುಮಾರ

dc

ಮಂಡ್ಯ : ಪೌರ ಕಾರ್ಮಿಕರಿಗೆ ನೀಡಲಾಗಿರುವ ಸುರಕ್ಷತಾ ಪರಿಕರಗಳನ್ನು ಪೌರಕಾರ್ಮಿಕರು ಧರಿಸಿ ಕೆಲಸ ನಿರ್ವಹಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಸಫಾಯಿ ಕರ್ಮಚಾರಿ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಿಕ್ಷಣದ ಮಹತ್ವದ ಬಗ್ಗೆ ಪೌರ ಕಾರ್ಮಿಕರಿಗೆ ಅರಿವು ಮೂಡಿಸಿ ಎಂದು ತಿಳಿಸಿದರು.

ಸಫಾಯಿ ಕರ್ಮಚಾರಿಗಳ ಮಕ್ಕಳುಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಸನ್ಮಾನಿಸಿ, ಅಧಿಕಾರಿಗಳು ಪೌರಕಾರ್ಮಿಕರೊಂದಿಗೆ ಸಭೆಗಳನ್ನು ಆಯೋಜಿಸಿ ಸುರಕ್ಷತಾ ಪರಿಕರಗಳ ಕುರಿತು ಅರಿವು ಮತ್ತು ಮಹತ್ವದ ಕುರಿತು ಜಾಗೃತಿ ಮೂಡಿಸಿ. ಸುರಕ್ಷತಾ ಪರಿಕರಗಳನ್ನು ಬಳಸದೆ ಕೆಲಸ ನಿರ್ವಹಿಸಬಾರದು ಎಂಬುದನ್ನು ಮನದಟ್ಟು ಮಾಡಿ ಎಂದರು.

ಪೌರ ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ 3 ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣಾ ಮಾಡಲಾಗುತ್ತಿದೆ, ಅಗತ್ಯವಿದ್ದರೆ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿ. ಪೌರ ಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಅರ್ಹ ಪೌರ ಕಾರ್ಮಿಕರಿಗೆ ಸವಲತ್ತು ನೀಡಿ ಎಂದು ಸೂಚಿಸಿದರು.

ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಇ.ಎಸ್.ಐ ಮತ್ತು ಪಿ.ಎಫ್ ಮೊತ್ತವನ್ನು ಕಡ್ಡಾಯವಾಗಿ ಸಂಸ್ಥೆಯವರು ನೀಡಬೇಕು, ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಾಣ ಮಾಡಬೇಕು ಮಂಡ್ಯದಲ್ಲಿ ಈಗಾಗಲೇ ಒಂದು ಪೌರ ಕಾರ್ಮಿಕ ವಿಶ್ರಾಂತಿ ಗೃಹ ಚಾಲ್ತಿಯಲ್ಲಿದೆ, ಮುಂದಿನ ದಿನಗಳಲ್ಲಿ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ವಿಶ್ರಾಂತಿ ಗೃಹಗಳನ್ನು ತೆರೆಯಲಾಗುವುದು ಎಂದರು.

ಕೆಲವು ಕಡೆ ನಿಗದಿ ಪಡಿಸಿದ ಉದ್ದೇಶಕ್ಕೆ ಹೊರತಾಗಿ ಬೇರೆ ಕೆಲಸಕ್ಕೆ ಪೌರ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ದೂರು ಕೇಳಿ ಬರುತ್ತಿದೆ, ಅಧಿಕಾರಿಗಳು ನಿಗದಿ ಪಡಿಸಿದ ಉದ್ಯೋಗಗಳಿಗೆ ಮಾತ್ರ ಪೌರ ಕಾರ್ಮಿಕರನ್ನು ಬಳಸಿಕೊಳ್ಳಬೇಕು ಇತರ ಕಾರ್ಯಗಳಿಗೆ ಅವರನ್ನು ಬಳಸಿಕೊಂಡರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಡಿ.ವೈ.ಎಸ್.ಪಿ. ಲಕ್ಷ್ಮಿ ಕಾಂತ್ ಪ್ರಸಾದ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

Tags:
error: Content is protected !!