ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15 ದಿನಗಳ ಕಾಲ ನೀರು ಹರಿಸಲು ಆದೇಶಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಅರೆಬೆತ್ತಲೆ ಪ್ರತಿಭಟನೆ ಹಾಗೂ ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದು, ಕರುನಾಡಲ್ಲಿ ಬರದ ಭೀತಿ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ನೀರು ಹರಿಸುವಂತೆ ಶಿಫಾರಸು ಮಾಡಿರುವುದು ಖಂಡನೀಯ. ತಮಿಳುನಾಡಿನ ಒತ್ತಡದ ಮೇರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಉನ್ನತ ಮಟ್ಟದ ಸಭೆ ನಡೆಸಿದೆ. ಕಳೆದ ಸಭೆಯಲ್ಲೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಯಾವುದೇ ಸೂಚನೆ ನೀಡಿರಲಿಲ್ಲ. ಇದಕ್ಕೆ ತಮಿಳುನಾಡು ಅತೃಪ್ತಿ ವ್ಯಕ್ತಪಡಿಸಿತ್ತು. ಇದೀಗ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸೂಚಿಸಿರುವುದು ಸರಿಯಲ್ಲ ಎಂದರು.
3500 ಕ್ಯೂಸೆಕ್ನಂತೆ 15 ದಿನಗಳಲ್ಲಿ ಒಟ್ಟು 4 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್ಸಿ ಹೇಳಿದೆ. ಜೀವನಾಡಿ ಕೆ.ಆರ್.ಎಸ್ ಸೇರಿದಂತೆ ರಾಜ್ಯದ ಎಲ್ಲ ಜಲಾಶಯಗಳು ಬತ್ತಿ ಹೋಗಿ, ಬರದ ಛಾಯೆ ಆವರಿಸಿದೆ. ಪರಿಸ್ಥಿತಿ ಹೀಗಿದ್ದರೂ ನೀರು ಬಿಡಲು ಆದೇಶಿಸಿರುವುದು ಖಂಡನೀಯ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.




