ಮಂಡ್ಯ

ಮೈಶುಗರ್ ಕಾರ್ಖಾನೆ ಉಳಿವು ಹಾಗೂ ಬೃಂದಾವನ ಉದ್ಯಾನ ಅಭಿವೃದ್ಧಿ ಬಗ್ಗೆ ಡಿಸಿಎಂ ʼಡಿಕೆಶಿʼ ಚರ್ಚೆ

ಮಂಡ್ಯ: ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿ ಸಂಬಂಧ ಉಪ ಮುಖ್ಯಮಂತ್ರಿ ಅವರು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು. ನಂತರ ಕೆಆರ್ ಎಸ್ ನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ವಿವಿಧ ಸಭೆಗಳ ಮಾಹಿತಿ ನೀಡಿದರು.

ಬೃಂದಾವನ ಉದ್ಯಾನ ಮೇಲ್ದರ್ಜೆಗೆ ಏರಿಸಲು “ಈಗ ಇರುವ 200 ಎಕರೆ ಜಾಗದಲ್ಲಿ ಯೋಜನೆ ಆರಂಭಿಸುತ್ತೇವೆ. ಅಣೆಕಟ್ಟಿನ ರಕ್ಷಣೆಗೆ ಅಗತ್ಯವಿರುವ ಜಾಗವನ್ನು ಬಿಟ್ಟು ಇತರೆ ಜಾಗದಲ್ಲಿ ನಾವು ಯೋಜನೆ ರೂಪಿಸುತ್ತಿದ್ದೇವೆ. ಎರಡು ಮೂರು ಪಂಚಾಯ್ತಿ ಸೇರಿ ಇದಕ್ಕೆ ಯೋಜನಾ ಪ್ರದೇಶ ರೂಪಿಸುತ್ತೇವೆ. ಮುಂದೆ ಹತ್ತಾರು ಸಾವಿರ ಉದ್ಯೋಗ ಸೃಷ್ಟಿಯಾಗಿ ಹೆಚ್ಚಿನ ಜನ ಆಗಮಿಸುವ ನಿರೀಕ್ಷೆಯಿಂದ ರಸ್ತೆ ಅಗಲೀಕರಣ ಸೇರಿದಂತೆ, ಈ ಭಾಗದ ಪ್ರವೇಶ ಹಾಗೂ ನಿರ್ಗಮನದಲ್ಲಿ ನಾಲ್ಕು ಪಥದ ರಸ್ತೆ, ನೀರು, ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಬೃಂದಾವನ ಹಾಗೂ ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಪ್ರವಾಸೋದ್ಯಮ ಉತ್ತೇಜನ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

“ನಮ್ಮ ಪರಂಪರೆ ಉಳಿಸಿಕೊಂಡು, ಹಳೆಯ ಮಾದರಿಯಲ್ಲಿ ಕೆಲವು ಮಾರ್ಪಾಡು ಮಾಡಿಕೊಳ್ಳಲಾಗಿದೆ. ಈ ಯೋಜನೆಗೆ ನಾವು 2 ಸಾವಿರ ಕೋಟಿ ಅನುದಾನ ಇಟ್ಟುಕೊಂಡಿದ್ದು, ಉದ್ಯಾನವನ ಮೇಲ್ದರ್ಜೆಗೆ ಮಾಡುವವರು ಯಾವ ರೀತಿ ಮಾಡಬೇಕು ಎಂದು ಕೆಲವು ಮಾರ್ಗಸೂಚಿಯನ್ನು ನಿಗದಿಪಡಿಸಿದ್ದೇವೆ” ಎಂದರು.

ಅಣೆಕಟ್ಟಿಗೆ ಯಾವುದೇ ತೊಂದರೆಯಾಗದಂತೆ ಅಣೆಕಟ್ಟಿನ ಘನತೆ ಹೆಚ್ಚಿಸಿ ಆರ್ಥಿಕ ಅಭಿವೃದ್ಧಿಗೆ ಯೋಜನೆ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಮೈಶುಗರ್ ಕಾರ್ಖಾನೆ ಉಳಿಸಲು ಚರ್ಚೆ:

ಮಂಡ್ಯ ಜಿಲ್ಲೆಯ ಸಮಸ್ಯೆ ಕುರಿತು ಇಲ್ಲಿನ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಐತಿಹಾಸಿಕ ಮೈಶುಗರ್ ಕಾರ್ಖಾನೆ ಹೇಗೆ ಉಳಿಸಿಕೊಳ್ಳಬೇಕು, ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಸಭೆ ಮಾಡಿದ್ದೇವೆ. ಹೊಸ ಕಾರ್ಖಾನೆ ಆರಂಭಿಸುವ ಬಗ್ಗೆ ಹಾಗೂ ಇರುವ ಕಾರ್ಖಾನೆಗೆ ಹೊಸ ವ್ಯವಸ್ಥೆ ಕಲ್ಪಿಸುವುದೇ ಎಂದು ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

“ಸಕ್ಕರೆ ಕಾರ್ಖಾನೆಯಲ್ಲಿ 10 ಸಾವಿರ ಟಿಸಿಡಿ ಮಾಡುವುದು ನಮ್ಮ ಮುಂದೆ ಇರುವ ಆಯ್ಕೆ. ಇದನ್ನು ಮಾಡಿದರೆ ಬೇಕಾಗಿರುವ ಕಬ್ಬನ್ನು ಎಲ್ಲಿಂದ ತರುವುದು? ಬೆಳೆ ಪ್ರಮಾಣ ಎಷ್ಟಿದೆ? ಎಂದು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಈಗಿರುವ 5 ಸಾವಿರ ಟಿಸಿಡಿ ಸಂಪೂರ್ಣವಾಗಿ ನಡೆದು ಅಲ್ಲಿ ಎಥೆನಾಲ್ ಘಟಕ ಸೇರಿದಂತೆ ಎಲ್ಲವೂ ಕಾರ್ಯಾರಂಭವಾಗಿ ಸಂಸ್ಥೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು. ನಾವು ದೊಡ್ಡ ಕಾರ್ಖಾನೆ ಮಾಡುವುದು ದೊಡ್ಡದಲ್ಲ. ಅದಕ್ಕೆ ತಕ್ಕಂತೆ ರೈತರು ಕಬ್ಬು ಬೆಳೆಯಲು ಉತ್ತೇಜನ ನೀಡಬೇಕು” ಎಂದು ತಿಳಿಸಿದರು.

“ನಮಗಿರುವ ವರದಿ ಪ್ರಕಾರ ಅಕಾಲಿಕ ಮಳೆಯಿಂದಾಗಿ ರೈತರು ಕಬ್ಬು ಬೆಳೆಯುವುದನ್ನು ಬಿಟ್ಟು ಬೇರೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. 2 ಸಾವಿರ ರೈತರು ಕಬ್ಬು ಬೆಳೆಗೆ ಮುಂದಾಗಿದ್ದಾರೆ. ಇದಕ್ಕೆ ಏನು ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಈ ಕಾರ್ಖಾನೆ ಜತೆಗೆ ಇನ್ನು ಐದಾರು ಕಾರ್ಖಾನೆಗಳಿವೆ. ಎಲ್ಲವೂ ಸುಸ್ಥಿರವಾಗಿರಬೇಕು” ಎಂದರು.

5 ಸಾವಿರ ಟಿಸಿಡಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಬೇಕಾಗಿರುವ ಅಗತ್ಯ ಕ್ರಮ ಕೈಗೊಳ್ಳಿ ಎಂದು ತಾಂತ್ರಿಕ ಸಮಿತಿ ತಿಳಿಸಿದೆ. ಹೀಗಾಗಿ ಈಗ ಇರುವ ಘಟಕ ಆರ್ಥಿಕವಾಗಿ ಗಟ್ಟಿಯಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ರೈತರಿಗೆ ಬೆಳೆಗೆ ತಕ್ಕ ಬೆಲೆ ಸಿಗುವಂತಾಗಬೇಕು. ರೈತರು ನಿರಂತರವಾಗಿ ಕಬ್ಬು ಬೆಳೆಯುವಂತೆ ಮಾಡಬೇಕು. ಮಧ್ಯೆ ಬರಗಾಲ ಬಂದು ಬೆಳೆ ನಿಲ್ಲುವಂತೆ ಆಗಬಾರದು ಎಂದರು.

ತಮಿಳುನಾಡಿಗೆ 149 ಟಿಎಂಸಿ ನೀರು ಹರಿದಿದೆ:

“ಇನ್ನು ಕಾವೇರಿ ನೀರು ಹರಿಬಿಡುವ ವಿಚಾರವಾಗಿ, ಈಗ ನಾವು ಬಿಳಿಗುಂಡ್ಲುವಿಗೆ 50 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ 96 ಟಿಎಂಸಿ ಹೆಚ್ಚುವರಿಯಾಗಿ ನೀರು ಹರಿಸಿದ್ದೇವೆ. ತಮಿಳುನಾಡು ಪಾಲಿನ 177 ಟಿಎಂಸಿ ನೀರಿನ ಪೈಕಿ ಈಗಾಗಲೇ 149 ಟಿಎಂಸಿ ನೀರನ್ನು ಹರಿಸಲಾಗಿದೆ. ಈಗ ನಮ್ಮ ಭಾಗದಲ್ಲಿ ಎಲ್ಲೆಲ್ಲಿ ಕೆರೆಗಳನ್ನು ತುಂಬಿಸಲು ಸಾಧ್ಯವೋ ಎಲ್ಲಾ ಕೆರೆ ತುಂಬಿಸಲು ಸೂಚನೆ ನೀಡಲಾಗಿದೆ. ಕೆರೆ ತುಂಬಿಸಲು ಇರುವ ಅಡಚಣೆ ನಿವಾರಣೆಗೂ ಸೂಚನೆ ನೀಡಿದ್ದೇನೆ. ನಮ್ಮ ರೈತರು ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಸಲಹೆಯಂತೆ ಬೆಳೆಗಳನ್ನು ಹಾಕಬೇಕು ಎಂದು ರೈತರಲ್ಲಿ ಮನವಿ ಮಾಡುತ್ತೇನೆ” ಎಂದರು.

ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿಕೊಳ್ಳಲು ಮೇಕೆದಾಟು ಯೋಜನೆಯ ಅವಶ್ಯಕತೆ ಇದೆ:
ನಮ್ಮ ಲೆಕ್ಕದ ಪ್ರಕಾರ 71 ಟಿಎಂಸಿಯಷ್ಟು ನೀರು ಸಮುದ್ರದ ಪಾಲಾಗಿದ್ದು, ನಮ್ಮ ಮೇಕೆದಾಟು ಅಣೆಕಟ್ಟಿನ ಸಾಮರ್ಥ್ಯ ಕೇವಲ 66 ಟಿಎಂಸಿ. ಸಮುದ್ರಕ್ಕೆ ಹೋಗುತ್ತಿರುವ ಹೆಚ್ಚುವರಿ ನೀರನ್ನು ಹೇಗೆ ಬಳಸಿಕೊಳ್ಳಬೇಕು ಇದಕ್ಕೆ ಅನುಮತಿ ನೀಡಿ ಎಂದು ಕೇಳುತ್ತಿದ್ದೇವೆ ಎಂದು ತಿಳಿಸಿದರು.

ಪ್ರವಾಸೋದ್ಯಮ, ಕೃಷಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಸಚಿವರು ಸೇರಿ ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ ಬಗ್ಗೆ ಮಾಹಿತಿ ಪಡೆಯಲು ಪ್ರವಾಸ ಕೈಗೊಂಡು ನಂತರ ವರದಿ ನೀಡಲಿದ್ದಾರೆ. ಇದರ ಜತೆಗೆ ಬೃಂದಾವನ ಉದ್ಯಾನ ಮೇಲ್ದರ್ಜೆಗೆ ಏರಿಸುವ ಯೋಜನೆಯಲ್ಲೇ ಕಾವೇರಿ ಆರತಿ ಕಾರ್ಯಕ್ರಮಕ್ಕೂ ಜಾಗ ಮೀಸಲಿಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ ಕೆಲವು ಜಾಗವನ್ನು ಸೂಚಿಸಿದ್ದೇನೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್, ಉದಯ್ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

49 mins ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

3 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

7 hours ago