ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಂಗಪಟ್ಟಣ ದಸರಾ ಅಚ್ಚಕಟ್ಟಾಗಿ, ಅದ್ದೂರಿಯಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರ ವರ್ಗಾವಣೆಗೂ ಗಣೇಶ ವಿಸರ್ಜನೆ ಸಮಯದಲ್ಲಿ ಉಂಟಾದ ಗಲಭೆಗೂ ಸಂಬಂಧವಿಲ್ಲ. ಕಳೆದ ಆರು ತಿಂಗಳ ಹಿಂದೆಯೇ ಅವರ ಅವಧಿ ಮುಕ್ತಾಯಗೊಂಡಿತ್ತು. ಆವಾಗ ಸ್ವತಃ ನಾನೇ ಗೃಹ ಮಂತ್ರಿಗಳ ಜೊತೆ ಮಾತನಾಡಿ ಜಿಲ್ಲೆಯಲ್ಲಿಯೇ ಮುಂದುವರಿಸಲು ಬೇಡಿಕೆ ಇಟ್ಟಿದೆ ಅಷ್ಟರಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ ಆದರಿಂದ ಅವರು ವರ್ಗಾವಣೆಯಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿಗೆ ಗೊತ್ತಾ?
ಮಂಡ್ಯ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ಬಿಡುವುದಿಲ್ಲ ಬಿ.ಜೆ.ಪಿ, ಜೆಡಿಎಸ್ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ. ಈಗ ಪರಿಸ್ಥಿತಿ ಹತೋಟಿಯಲ್ಲಿ ಇದೆ. ಮದ್ದೂರಿನಲ್ಲಿ ನಡೆದಂತಹ ಗಲಭೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ನೆನ್ನೆ ಮಳವಳ್ಳಿಯಲ್ಲೂ ಸಹ ಬಂದ್ ನಡೆದಿದೆ ಅಲ್ಲೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಇನ್ನೂ ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದ 21 ಜನರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಅದರ ಹಿಂದೆ ನಡೆದಿರುವ ಘಟನೆಗಳ ಕುರಿತು ತನಿಖೆಯ ನಂತರ ತಿಳಿಯುತ್ತದೆ. ನಾಗಮಂಗಲ ಗಲಭೆಯಲ್ಲೂ ಸಹ ಸಂಬಂಧಪಟ್ಟವರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ ಪ್ರಸ್ತುತ ಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಓಲೈಕೆ ಪ್ರಶ್ನೆ ಇಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





