Mysore
26
broken clouds

Social Media

ಗುರುವಾರ, 08 ಜನವರಿ 2026
Light
Dark

ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ : ಕೆ.ಬದ್ರುದ್ದೀನ್

30 ದಿನದೊಳಗಾಗಿ ಅಗತ್ಯ ಮಾಹಿತಿ ನೀಡಿ 

ಮಂಡ್ಯ : ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ, ಅಧಿಕಾರಿಗಳು ಆರ್.ಟಿ.ಐ. ಕಾಯ್ದೆಯ ಕುರಿತು ಮೊದಲು ಸಮರ್ಪಕವಾಗಿ ತಿಳಿದುಕೊಳ್ಳಿ, ಮಾಹಿತಿ ಹಕ್ಕು ಕಾಯ್ದೆಯ ಮೂಲ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಅರ್ಜಿದಾರರು ಆರ್.ಟಿ.ಐ.ನಡಿ ಮಾಹಿತಿ ಕೋರಿದ ೩೦ ದಿನದೊಳಗಾಗಿ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ. ಬದ್ರುದ್ದೀನ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಮಾಹಿತಿ ಹಕ್ಕು ಕಾಯ್ದೆಯ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಹಿತಿ ಹಕ್ಕು ಕಾಯ್ದೆ ಅತ್ಯಂತ ಸರಳವಾಗಿದೆ. ಕಾಯ್ದೆಯನ್ನು ಓದಿ ಅರ್ಥೈಸಿಕೊಳ್ಳಿ. ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಕೇಳಿರುವ ಮಾಹಿತಿಯನ್ನು ಒದಗಿಸಿ, ನೀಡಬಹುದಾದ ಹಾಗೂ ನೀಡಲಾಗದ ಮಾಹಿತಿಗಳನ್ನು ಬೇರ್ಪಡಿಸಿ ಇಟ್ಟುಕೊಳ್ಳಿ, ಅರ್ಜಿದಾರರ ಅರ್ಜಿ ಓದಿ ನಿಮ್ಮ ವ್ಯಾಪ್ತಿಗೆ ಬರುತ್ತದೆಯೋ ಇಲ್ಲವೂ ಎಂದು ಮೊದಲು ಖಚಿತಪಡಿಸಿಕೊಳ್ಳಿ. ನಿಮ್ಮ ವ್ಯಾಪ್ತಿಗೆ ಬಾರದಿರುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ಅರ್ಜಿ ಸಲ್ಲಿಕೆಯಾದ ೫ ದಿನದೊಳಗಾಗಿ ವರ್ಗಾಯಿಸಿ ಅರ್ಜಿದಾರರ ಗಮನಕ್ಕೆ ತನ್ನಿ ಎಂದು ತಿಳಿ ಹೇಳಿದರು.

೧೧೩೫ ಅರ್ಜಿಗಳು ಬಾಕಿ: ಅಽಕಾರಿಗಳ ಕಣ್ತಪ್ಪಿನಿಂದ ಯಾವುದಾದರೂ ಮಾಹಿತಿ ನೀಡುವಲ್ಲಿ ಲೋಪ ಉಂಟಾದರೆ ಅರ್ಜಿದಾರರು ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತನ್ನಿ. ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ೧೧೩೫ ಆಯೋಗದಲ್ಲಿ ಮೇಲ್ಮನವಿ ಅರ್ಜಿಗಳು ಬಾಕಿ ಇವೆ. ಎಲ್ಲಾ ಜಿಲ್ಲೆಗೆ ಹೋಲಿಸಿದರೆ ಮಂಡ್ಯ ಜಿಲ್ಲೆಯ ಶೇ ೩ ರಷ್ಟು ಮಾತ್ರ ಇದೆ. ಇದು ಶೂನ್ಯಕ್ಕೆ ಬಕಡಿಮೆಯಾಗುತ್ತದೆ. ಅಧಿಕಾರಿಗಳು ಅರ್ಜಿ ಸಲ್ಲಿಸಿದವರಿಗೆ ಅಗತ್ಯ ಮಾಹಿತಿ ಒದಗಿಸಿ, ಮಾಹಿತಿ ಇಲ್ಲದಿದ್ದಲ್ಲಿ ಮಾಹಿತಿ ಏಕೆ ಲಭ್ಯವಿಲ್ಲ ಎಂಬುದರ ಕುರಿತು ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ಒದಗಿಸಿ ಎಂದು ತಿಳಿಸಿದರು.

ಪಾರದರ್ಶಕ ಆಡಳಿತಕ್ಕೆ ಮಾಹಿತಿ ಹಕ್ಕು ಕಾಯ್ದೆ ಸಹಕಾರಿ: ಅಧಿಕಾರಿಗಳು ಆಡಳಿತದಲ್ಲಿ ಪಾರದರ್ಶಕ ಆಡಳಿತ ಅಳವಡಿಸಿಕೊಳ್ಳಲು ಮಾಹಿತಿ ಹಕ್ಕು ಕಾಯ್ದೆ ಸಹಕಾರಿಯಾಗಿದೆ. ಸಾರ್ವಜನಿಕರು ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಮಾಹಿತಿ ಅಧಿಕಾರಿ ಮೊದಲು ಅರ್ಜಿ ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಹೇಳಿದರು.

ಮಾಹಿತಿ ಹಕ್ಕು ಕಾಯ್ದೆಗೆ ಒಂದು ಸರ್ಕಾರವನ್ನು ಕೆಡುವ ಶಕ್ತಿ ಇದೆ. ಲಭ್ಯವಿರುವ ದಾಖಲೆಗಳನ್ನು ಮಾತ್ರ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿದ್ದಲ್ಲಿ ಅವುಗಳನ್ನು ಸಹ ನೀಡಬಹುದು. ಹೊಸದಾಗಿ ದಾಖಲೆ ಸೃಷ್ಟಿಸಿ ದಾಖಲೆ ನೀಡಲು ಅವಕಾಶವಿಲ್ಲ ಎಂದರು.

ಕಂದಾಯ ಇಲಾಖೆ ಹಾಗೂ ಆರ್.ಡಿ.ಪಿ.ಆರ್. ಇಲಾಖೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಮೇಲ್ಮನವಿ ಬರುವುದೇ ಹೆಚ್ಚು. ಪಂಚತಂತ್ರ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಪಾರದರ್ಶಕವಾಗಿ ಅನಾವರಣ ಮಾಡಿದರೆ ಬಹಳಷ್ಟು ಅರ್ಜಿಗಳು ಮೂಲ ಹಂತದಲ್ಲೇ ವಿಲೇವಾರಿಯಾಗುತ್ತದೆ. ಆಯೋಗಕ್ಕೆ ಬಂದ ಮೇಲ್ಮನವಿಗಳ ೪೫ ಸಾವಿರ ಅರ್ಜಿಗಳಲ್ಲಿ ೨೫ ಸಾವಿರ ಕಂದಾಯ ಇಲಾಖೆಯ ವ್ಯಾಪ್ತಿಗೆ ಸೇರಿರುತ್ತದೆ ಎಂದರು.

ಮಾಹಿತಿ ಹಕ್ಕು ಕಾಯ್ದೆಯಡಿ ೪ (೧ಎ) ಮತ್ತು ೪(೧ಬಿ)ಯಲ್ಲಿ ನಿಗದಿಪಡಿಸಿರುವ ವಿಷಯಗಳ ಬಗ್ಗೆ ವಿಷಯಗಳನ್ನು ಅನಾವರಣಗೊಳಿಸಿ ಇದರಿಂದ ಬಹಳಷ್ಟು ಮಾಹಿತಿ ಹಕ್ಕು ಅರ್ಜಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಇದರೊಂದಿಗೆ ಕಡತಗಳನ್ನು ನಿಯಮಾನುಸಾರ ಎ, ಬಿ, ಸಿ, ಡಿ ವರ್ಗೀಕರಣ ಮಾಡಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗವಹಿಸಿದ್ದರು.

Tags:
error: Content is protected !!