Mysore
17
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ದಲಿತರಿಗೆ ಅನ್ಯಾಯ ಮಾಡಬೇಡಿ-ಅಧಿಕಾರ ಕೊಡಿ

ಕೆ.ಆರ್.ಪೇಟೆ : ದಲಿತರನ್ನು ಕಾಂಗ್ರೆಸ್ ಪಕ್ಷದವರು ಕೇವಲ ಓಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳಬೇಡಿ. ದಲಿತರಿಗೆ ಪುರಸಭೆ ಸೇರಿದಂತೆ ಅವಕಾಶ ಇರುವ ಕಡೆಗಳಲ್ಲಿ ಅಧಿಕಾರ ಕೊಡಿ ಎಂದು ಪುರಸಭೆ ಸದಸ್ಯ ಡಿ.ಪ್ರೇಮ್ ಕುಮಾರ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರನ್ನು ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ವೇಳೆ ಮಾತನಾಡಿದ ಪ್ರೇಮ್‌ ಕುಮಾರ್, ನನಗೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು.

ಪುರಸಭೆಯಲ್ಲಿ ತಮಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಅವಕಾಶ ಇದ್ದರೂ ಸಹ ನೀಡದೇ ವಂಚಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಈ ಬಗ್ಗೆ ಜಿಲ್ಲಾ ಮಂತ್ರಿಗಳು ಹಾಗೂ ಮುಖಂಡರೊಂದಿಗೆ ಸಮಾಲೋಚಿಸಿ ಸೂಕ್ತ ಪರಿಹಾರ ರೂಪಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾ.ಪಂ.ಉಪಾಧ್ಯಕ್ಷ ಹೆಮ್ಮಡಹಳ್ಳಿ ತಿಮ್ಮೇಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಆಶ್ರಯ ಮನೆಗಳನ್ನು ಕಳೆದ ಎರಡು ವರ್ಷದಿಂದ ಒಂದೂ ಮನೆ ನೀಡಿಲ್ಲ. ಇದರಿಂದ ಮತದಾರರು ಪಕ್ಷ ಸಂಘಟನೆಗೆ ಮತದಾರರ ಬಳಿ ಹೋದಾಗ ನಿಮ್ಮ ಕಾಂಗ್ರೆಸ್ ಪಕ್ಷದಿಂದ ಒಂದೇ ಒಂದು ಆಶ್ರಯ ಮನೆ ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ ಈಸಲವಾದರೂ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಕನಿಷ್ಠ ೧೦೦ ಇಂದಿರಾ, ಅಂಬೇಡ್ಕರ್, ಬಸವ ವಸತಿ ಯೋಜನೆಗಳ ಅಡಿ ಯಲ್ಲಿ ಮನೆಗಳನ್ನಾದರೂ ಮಂಜೂರು ಮಾಡಿ ಕಾಂಗ್ರೆಸ್ ಪಕ್ಷದ ಮರ್ಯಾದೆ ಉಳಿಸಬೇಕು ಎಂದು ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಅಗ್ರಹಾರಬಾಚಹಳ್ಳಿ ಎ.ಸಿ.ಮುರುಳಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಇದ್ದರೂ ಸಹ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಲಸವಿಲ್ಲದಂತಾಗಿದೆ. ಹಾಗಾಗಿ ಅಭಿವೃದ್ದಿಗೆ ಅನುಧಾನ ಬಿಡುಗಡೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಬೇಕು. ಈ ಮೂಲಕ ಗ್ರಾಮಗಳ ಅಭಿವೃದ್ದಿ ಮಾಡಿ ಪಕ್ಷ ಸಂಘಟನೆ ಮಾಡಲು ಅವಕಾಶ ನೀಡಬೇಕು ಎಂದು ಜಿಲ್ಲಾಧ್ಯಕ್ಷರಿಗೆ ಮನವಿಮಾಡಿ ಈ ಬಗ್ಗೆ ಸಚಿವರೊಂದಿಗೆ ಮಾತನಾಡಿ ಅನುಧಾನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಿದರು.

ಈ ವೇಳೆ ನಿವೃತ್ತ ಬಿ.ಎಸ್.ಎನ್.ಎನ್ ಅಧಿಕಾರಿ ಎಂ.ಕೆ.ರಮೇಶ್ ಅವರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

Tags:
error: Content is protected !!